ರಾಜ್ಯ ಸರ್ಕಾರದ ವತಿಯಿಂದ ಮಂಡ್ಯದಲ್ಲಿ ಆಯೋಜಿಸಲಾಗಿದ್ದ ‘ಕಾವೇರಿ ಆರತಿ’ಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈಗಾಗಲೇ ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಈಗ ಈ ಸಿದ್ಧತೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
ಕಾವೇರಿ ಆರತಿ ಆಯೋಜಿಸುವ ಸರಕಾರದ ತೀರ್ಮಾನವನ್ನು ಆಕ್ಷೇಪಿಸಿ ರೈತ ನಾಯಕಿ, ಮಂಡ್ಯ ಜಿಲ್ಲೆಯ ಸುನಂದಾ ಜಯರಾಮ್ ಅವರು ಹೈಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ‘ಈ ಕಾರ್ಯಕ್ರಮ ಮಾಡುವುದರಿಂದ ಜಲಾಶಯದ ಸುರಕ್ಷತೆ ಮತ್ತು ಭದ್ರತೆಗೆ ಅಪಾಯಕಾರಿಯಾಗಿದೆ. ಅಲ್ಲದೇ ಜಲ, ಪರಿಸರ ಹಾಗೂ ವಾಯು ಮಾಲಿನ್ಯಕ್ಕೂ ಇದು ಕಾರಣವಾಗಲಿದೆ. ಸರ್ಕಾರದ ಈ ನಿರ್ಧಾರ 2021ರ ಜಲಾಶಯ ಸುರಕ್ಷತಾ ಕಾಯಿದೆಗೆ ವಿರುದ್ಧವಾಗಿದೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.
ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಕಾವೇರಿ ಆರತಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಲ್ಲದೇ ಈ ಸಂಬಂಧ 2 ವಾರಗಳಲ್ಲಿ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟೀಸ್ ನಲ್ಲಿ ಸೂಚಿಸಲಾಗಿದೆ. ಹೀಗಾಗಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಬ್ರೇಕ್ ಬಿದ್ದಂತೆ ಆಗಿದೆ.