ಬೆಳಗಾವಿ : ಸೈಬರ್ ಕ್ರೈಮ್ (Cyber crime ) ಇತ್ತೀಚೆಗೆ ಹೆಚ್ಚಾಗಿದ್ದು, ಆನ್ಲೈನ್ ವಂಚನೆಗೆ ಹಲವರು ಕಂಗಾಲಾಗಿದ್ದಾರೆ. ಸೈಬರ್ ಕ್ರೈಂ ಕರ್ನಾಟಕದಲ್ಲಿ (Karnataka) ವರ್ಷದಿಂದ ವರ್ಷಕ್ಕೆ ಎಷ್ಟು ಹೆಚ್ಚಾಗುತ್ತಿದೆ ಎಂಬುದು ವಿಧಾನಸಭೆ ಅಧಿವೇಶನದಲ್ಲೂ ಮಂಗಳವಾರ ಚರ್ಚೆಗೆ ಗ್ರಾಸವಾಯಿತು.
ಮೊದಲಿಗೆ ಬಿಜೆಪಿ ಶಾಸಕ ಸಿಮೆಂಟ್ ಮಂಜು ಸೈಬರ್ ಅಪರಾಧಗಳ ಕುರಿತ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಗೃಹಸಚಿವ ಪರಮೇಶ್ವರ್, ದೇಶ-ವಿದೇಶಗಳಲ್ಲಿ ಇಂದು ಆನ್ಲೈನ್ ಬೆಟ್ಟಿಂಗ್ ಹೆಚ್ಚಾಗಿದೆ. ಕಳ್ಳತನ, ಸುಲಿಗೆ, ದರೋಡೆ, ಡಕಾಯಿತಿ ಪ್ರಕರಣಗಳಿಗಿಂತ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.
2023 ರ ನವೆಂಬರ್ 15 ರಿಂದ ಈವರೆಗೆ 57,733 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. 5,474 ಕೋಟಿ ರೂ. ವಂಚನೆ ಎಸಗಲಾಗಿದೆ. ಈ ಪೈಕಿ, 10,717 ಪ್ರಕರಣಗಳನ್ನು ಪತ್ತೆ ಹಚ್ಚಿ 627 ಕೋಟಿ ರೂ. ವಸೂಲು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಆನ್ಲೈನ್ ಗೇಮ್ಸ್ ನಿರ್ಬಂಧಿಸಲು ಸರ್ಕಾರ ಕ್ರಮ ಕೈಗೊಂಡಿತ್ತು. ಇಂಡಿಯನ್ ಗೇಮಿಂಗ್ ಫೆಡರೇಷನ್ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿದ್ದು, ಸರ್ಕಾರದ ಆದೇಶವನ್ನು ನ್ಯಾಯಾಲಯ ರದ್ದುಪಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಇದೇ 19ಕ್ಕೆ ವಿಚಾರಣೆಗೆ ಬರಲಿದೆ ಎಂದು ಪರಮೇಶ್ವರ್ ತಿಳಿಸಿದರು.
ಅಲ್ಲದೆ,ಸೈಬರ್ ಅಪರಾಧ ಪ್ರಕರಣಗಳ ತನಿಖೆಗೆ ಪ್ರತ್ಯೇಕವಾಗಿ ಡಿಜಿಪಿ ಶ್ರೇಣಿ ಅಧಿಕಾರಿಯ ನೇತೃತ್ವದಲ್ಲಿ ವಿಭಾಗವನ್ನೇ ರಚಿಸಿರುವುದು ದೇಶದಲ್ಲೇ ಪ್ರಥಮವೆನಿಸಿದೆ. ರಾಜ್ಯದಲ್ಲಿ 43 ಸೈಬರ್ ಅಪರಾಧ ತನಿಖಾ ಠಾಣೆಗಳನ್ನು ಆರಂಭಿಸಲಾಗಿದೆ ಎಂದು ಪರಂ ಹೇಳಿದರು.
