ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ಊಹಾಪೋಹಗಳ ಮಧ್ಯೆ ಗೃಹ ಸಚಿವ ಜಿ ಪರಮೇಶ್ವರ ಅವರು ಬುಧವಾರ “ಇದು ಮುಖ್ಯಮಂತ್ರಿಯ ಅಧಿಕಾರವಾಗಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಮತ್ತು ಹೈಕಮಾಂಡ್ನೊಂದಿಗೆ ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ” ಹೇಳಿದ್ದಾರೆ.
ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಅವರು ಮುಂದಿನ ದಿನಗಳಲ್ಲಿ ಸಂಪುಟ ಪುನಾರಚನೆಯ ಸಾಧ್ಯತೆಯನ್ನು ಸೂಚಿಸಿ ಮಂಗಳವಾರ ನೀಡಿದ ಹೇಳಿಕೆ, ಕೆಲವು ಸಚಿವರಿಗೆ ತಮ್ಮ ಅವಧಿಯ ಬಗ್ಗೆ “ಸಂದೇಶ” ನೀಡಲಾಗಿದೆ ಎಂದು ಗಮನಿಸಿರುವುದು ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.
ಪರಮೇಶ್ವರ ಅವರು, ‘ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿ ಅವರ ಪರಮಾಧಿಕಾರ. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಜತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ, ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಜತೆ ಸಮಾಲೋಚನೆ ನಡೆಸಿ ಕ್ರಮಕೈಗೊಳ್ಳಬೇಕು’ ಎಂದು ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದರು.
ಶಿವಕುಮಾರ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ಅವರು (ಶಿವಕುಮಾರ್) ಪಕ್ಷದ ರಾಜ್ಯಾಧ್ಯಕ್ಷರು, ಈಗಿರುವ ಸಚಿವರಿಗೆ ಯಾವ ಸಂದೇಶವನ್ನು ಕಳುಹಿಸಿದ್ದಾರೆ ಎಂದು ನನಗೆ ತಿಳಿದಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸಚಿವ ಸಂಪುಟ ಪುನಾರಚನೆ ಮತ್ತು ಸಚಿವರ ಕಾರ್ಯಕ್ಷಮತೆಯ ಮೌಲ್ಯಮಾಪನದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಶಾಸಕರ ಒಂದು ಭಾಗದಿಂದಲೂ ಸಂಪುಟಕ್ಕೆ ಸೇರ್ಪಡೆಯಾಗಬೇಕು ಎಂಬ ಬೇಡಿಕೆಯೂ ವ್ಯಕ್ತವಾಗಿದೆ. ಕೆಲವರು ಸಚಿವರಾಗುವ ಆಸೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ’ ಎಂದು ತಿಳಿಸಿದರು.
ಮುಸ್ಲಿಮರ ಮತದಾನದ ಹಕ್ಕನ್ನು ರದ್ದುಗೊಳಿಸಬೇಕು ಎಂಬ ವಿವಾದದ ಕುರಿತು ಕೇಳಿದ ಪ್ರಶ್ನೆಗೆ ಗೃಹ ಸಚಿವರು, ಸಂವಿಧಾನಕ್ಕೆ ವಿರುದ್ಧವಾಗಿ ಹೇಳಿಕೆ ನೀಡುವುದು ಸರಿಯಲ್ಲ. ಯಾರೂ ಸಹ ಈ ರೀತಿಯಾಗಿ ಮಾತನಾಡಬಾರದು. ಬಹುಶಃ ಅವರು ಸಂವಿಧಾನದ ತತ್ವಗಳನ್ನು ಮತ್ತು ಪ್ರತಿ ಸಮುದಾಯ ಮತ್ತು ಧರ್ಮಕ್ಕೆ ಅದರಲ್ಲಿ ಒದಗಿಸಲಾದ ಹಕ್ಕುಗಳು ಮತ್ತು ಅವಕಾಶಗಳನ್ನು ಸರಿಯಾಗಿ ನೋಡಿಲ್ಲ. ಇದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ” ಎಂದು ಗೃಹಸಚಿವರು ಹೇಳಿದರು.