ಹೊಸದಿಲ್ಲಿ : ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಹನಿಟ್ರ್ಯಾಪ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಲ್ಪಟ್ಟಿದೆ. ಬಿನಯ್ ಕುಮಾರ್ ಸಿಂಗ್ ಎಂಬವರ ಪರವಾಗಿ ವಕೀಲ ಬರುಣ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯದ ಜನತೆಯ ಗೊಂದಲಕ್ಕೆ ಕಾರಣವಾಗಿರುವ ಈ ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
ವಿಧಾನಸಭೆ ಅಧಿವೇಶನದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರು ಹನಿಟ್ರ್ಯಾಪ್ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ್ದರು. ಅಲ್ಲದೆ, 48 ರಾಜ್ಯ, ರಾಷ್ಟ್ರಮಟ್ಟದ ನಾಯಕರೂ ‘ಹನಿಟ್ರ್ಯಾಪ್’ಗೆ ಒಳಗಾಗಿದ್ದಾರೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ಬಹಿರಂಗಪಡಿಸಿದ್ದರು.