ಹಾಸನ: ನಗರದ ರೈಲ್ವೆ ನಿಲ್ದಾಣದ ಬಳಿ ಮಹಾನಗರಪಾಲಿಕೆ ಸಿಬ್ಬಂದಿ ಮತ್ತು ಬೀದಿ ಬದಿ ವ್ಯಾಪಾರಿಗಳ ನಡುವೆ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ತೀವ್ರ ವಾಗ್ವಾದ ಹಾಗೂ ಸಂಘರ್ಷದ ಪರಿಸ್ಥಿತಿ ಉಂಟಾಗಿದೆ.ಫುಟ್ಪಾತ್ನಲ್ಲಿ ಗೂಡಂಗಡಿಗಳನ್ನು ಇಟ್ಟುಕೊಂಡಿದ್ದ ಮಹಿಳಾ ವ್ಯಾಪಾರಿಗಳನ್ನು ತೆರವುಗೊಳಿಸಲು ಮಹಾನಗರಪಾಲಿಕೆ ಅಧಿಕಾರಿಗಳು ಜೆಸಿಬಿ ಯಂತ್ರದೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ವ್ಯಾಪಾರಿಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಜೆಸಿಬಿಯ ಮುಂದೆ ನಿಂತು ತೆರವಿಗೆ ಅಡ್ಡಿಯಾದ ಘಟನೆ ನಡೆದಿದೆ. ಟೀ, ಕಾಫಿ, ತಿಂಡಿ ಹಾಗೂ ಊಟ ಸೇರಿದಂತೆ ಹಲವು ಸಣ್ಣ ವ್ಯಾಪಾರಗಳನ್ನು ನಡೆಸುತ್ತಿದ್ದ ಮಹಿಳೆಯರು, ನಿನ್ನೆ ನಡೆದ ತೆರವು ಕಾರ್ಯಾಚರಣೆಯಲ್ಲಿ ಸಮಯ ಕೇಳಿದ್ದರೂ ಇಂದು ಏಕಾಏಕಿ ಜೆಸಿಬಿ ಮೂಲಕ ತೆರವುಗೊಳಿಸಲು ಮುಂದಾಗಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ನಾವು ಜೀವನೋಪಾಯಕ್ಕಾಗಿ ಸಣ್ಣ ಅಂಗಡಿಗಳನ್ನು ಇಟ್ಟುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ತೆರವುಗೊಳಿಸಲು ಬಿಡುವುದಿಲ್ಲ” ಎಂದು ಮಹಿಳಾ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಕೆಲವು ವ್ಯಾಪಾರಿಗಳು, “ನಾವು ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಲ್ಲ” ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
