ನಾನು ಹುಟ್ಟಿನಿಂದಲೇ ಅಪ್ಪಟ ಕಾಂಗ್ರೆಸ್ಸಿಗ, ಪಕ್ಷದ ಆಧಾರ ಸ್ತಂಭ: ಡಿಕೆಶಿ

ಬೆಂಗಳೂರು, ಆ.22- ನಾನು ಹುಟ್ಟಿನಿಂದಲೇ ಅಪ್ಪಟ ಕಾಂಗ್ರೆಸ್ಸಿಗ, ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ರಕ್ತ ಎಲ್ಲವೂ ಕಾಂಗ್ರೆಸ್‌‍. ನಾನು ಈಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ ಮತ್ತು ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಾಖಂಡಿತವಾಗಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ವಿಧಾನಸಭೆಯಲ್ಲಿ ಆರ್‌ಎಸ್‌‍ಎಸ್‌‍ ಗೀತೆ ಹಾಡಿದ್ದರ ಪರಿಣಾಮವಾಗಿ ನೀವು ಬಿಜೆಪಿ ಹಾಗೂ ಆರ್‌ಎಸ್‌‍ಎಸ್‌‍ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಗಳಾಗುತ್ತಿವೆ ಎಂದು ಕೇಳಿದಾಗ, “ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ, ಅದೇ ರೀತಿ ಆರ್‌ಎಸ್‌‍ಎಸ್‌‍ ಬಗ್ಗೆಯೂ ತಿಳಿದುಕೊಂಡಿದ್ದೇನೆ” ಎಂದರು.

ಆರ್‌ಎಸ್‌‍ಎಸ್‌‍ ನಿಂದ ಶಿಕ್ಷಣ ಸಂಸ್ಥೆಗಳ ಮೇಲೆ ಹೂಡಿಕೆ:

“ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್‌ಎಸ್‌‍ಎಸ್‌‍ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆಯನ್ನು ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರ್‌ಎಸ್‌‍ಎಸ್‌‍ ಪ್ರತಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಎಲ್ಲ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಾ ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ” ಎಂದು ಅವರು ಹೇಳಿದರು.

ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಒಬ್ಬ ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರು, ಯಾರು ಶತ್ರುಗಳು ಎಂಬುದನ್ನು ತಿಳಿಯಬೇಕಲ್ಲವೇ? ಅದಕ್ಕಾಗಿಯೇ ಆರ್‌ಎಸ್‌‍ಎಸ್‌‍ ಇತಿಹಾಸ ತಿಳಿದುಕೊಂಡಿದ್ದೇನೆ ಎಂದರು. “ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು, ಅದೇ ರೀತಿ ನಾವು ಮಾಡಿದ್ದೇವೆ” ಎಂದು ಅವರು ಹೇಳಿದರು.

ಉದಾಹರಣೆ ನೀಡುತ್ತಾ, “ನಿಮ್ಮಲ್ಲೂ (ಮಾಧ್ಯಮ) ಒಬ್ಬೊಬ್ಬರದ್ದು ಒಂದೊಂದು ಗುಣ. ಹಿಡಿಯಲು ಬಂದರೆ ಜಾರಿಕೊಳ್ಳುವ ಗುಣವಿದೆ. ಒಳ್ಳೆಯ ಗುಣವೂ ಇದೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ?” ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ‘ಠುಸ್‌‍ ಗಿರಾಕಿ’:

ಬಿಜೆಪಿಯವರು ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಬಿಜೆಪಿ ಒಂದು ಠುಸ್‌‍ ಗಿರಾಕಿ. ಅವರು ಮಾಡುತ್ತಿರುವುದು ರಾಜಕಾರಣ. ಹಿರಿಯ ಅಧಿಕಾರಿ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖಾ ತಂಡವು ಅಚ್ಚುಕಟ್ಟಾಗಿ ತಮ್ಮ ಕೆಲಸ ನಿರ್ವಹಿಸುತ್ತಿದೆ” ಎಂದರು.

ಆಧಾರವಿಟ್ಟುಕೊಂಡು ಆರೋಪ ಮಾಡಲಿ:

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌‍. ಸಂತೋಷ್‌ ಬಗ್ಗೆ ಆರೋಪ ಮಾಡಿದವನನ್ನು (ಮಹೇಶ್‌ ಶೆಟ್ಟಿ ತಿಮರೋಡಿ) ಒದ್ದು ಒಳಗೆ ಹಾಕಲಾಗಿದೆ. “ಆರೋಪ ಮಾಡಲು ಆತನ ಬಳಿ ದಾಖಲೆ ಏನಿದೆ? ನಮ್ಮ ನಡುವೆ ರಾಜಕೀಯವಾಗಿ ಸಾಕಷ್ಟು ಭಿನ್ನಾಭಿಪ್ರಾಯ ಹೊಂದಿರಬಹುದು, ಆದರೆ ನಮ್ಮ ವಿರೋಧಿಗಳ ಬಗ್ಗೆ ಏನೇನೋ ಮಾತನಾಡುತ್ತಾನೆ ಎಂದು ನಾವು ಖುಷಿಪಡುವುದಲ್ಲ” ಎಂದು ತಿಳಿಸಿದರು.

“ಇಂದು ಅವರ ಬಗ್ಗೆ ಮಾತನಾಡಿದವರು, ನಾಳೆ ನಮ್ಮ ಬಗ್ಗೆಯೂ ಮಾತನಾಡುತ್ತಾರೆ. ಈ ಹಿಂದೆ ಮುಖ್ಯಮಂತ್ರಿಯವರು ಹಾಗೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಈ ರಾಜ್ಯದಲ್ಲಿ ಯಾರ ಸ್ವಾಭಿಮಾನಕ್ಕೂ ಧಕ್ಕೆ ಬರದಂತೆ ಕೆಲಸ ಮಾಡಬೇಕು. ರಾಜಕೀಯ ಮಾಡಲಿ, ರಾಜಕೀಯವಾಗಿ ಆರೋಪಗಳನ್ನು ಮಾಡಲಿ. ಆದರೆ ಆಧಾರಗಳನ್ನಿಟ್ಟುಕೊಂಡು ಆರೋಪ ಮಾಡಲಿ” ಎಂದು ಅವರು ಹೇಳಿದರು.

ಧರ್ಮಸ್ಥಳದಲ್ಲಿ ಸಂಗ್ರಹವಾಗುವ ಹುಂಡಿ ಹಣದ ಲೆಕ್ಕ ಕೊಡಬೇಕು ಎನ್ನುವ ಸಮಾನ ಮನಸ್ಕ ವೇದಿಕೆಯ ಆಗ್ರಹದ ಬಗ್ಗೆ ಕೇಳಿದಾಗ, “ಇದನ್ನು ನೋಡಲು ಆದಾಯ ತೆರಿಗೆ ಇಲಾಖೆಯಿದೆ” ಎಂದು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು