ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದಿಂದ ಉಚ್ಛಾಟನೆ ಆದರೂ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಈಗ ಮತ್ತೊಮ್ಮೆ 2028 ರಲ್ಲಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎನ್ನುವ ಮೂಲಕ ಬಿಜೆಪಿ ಮಾತ್ರವಲ್ಲದೆ ರಾಜ್ಯದ ಜನತೆ ಹುಬ್ಬೇರಿಸುವಂತೆ ಹೇಳಿಕೆ ನೀಡಿದ್ದಾರೆ.
ಸದಾ ಒಂದಿಲ್ಲೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಾ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿ ಹೆಚ್ಚು ಸುದ್ದಿಯಲ್ಲಿದ್ದರು. ಇದೇ ಕಾರಣಕ್ಕೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆಗೊಂಡಿದ್ದಾರೆ. ಇದೂ ಸಾಲದೆಂಬಂತೆ ಈಗ ತನಗೆ ಯಾರ ಹಂಗೂ ಇಲ್ಲ ಎಂಬಂತೆ ತನ್ನ ಹಳೇ ಚಾಳಿ ಮುಂದುವರೆಸಿದ್ದು ‘2028 ರಲ್ಲಿ ನಾನೇ ಮುಖ್ಯಮಂತ್ರಿ’ ಎನ್ನುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡಿದ್ದು, ಮತ್ತೆ ಬಿ.ಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂತ್ರಿ ಆಗಿ ಎಂದು ಆಗ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆಗ ನಾನು ಅಭಿವೃದ್ಧಿಗೆ ಹಣ ಕೊಡಿ ಮಂತ್ರಿಗಿರಿ ಬೇಡ ಎಂದು ನಾನು ಅವರಿಗೆ ಹೇಳಿದ್ದೆ. ಕಾರಿನ ಮೇಲೆ ಕೆಂಪು ಗೂಟ ಹಾಕಿಕೊಂಡು ಓಡಾಡುವ ಶೋಕಿ ನನಗೆ ಇಲ್ಲ ಎಂದು ಹೇಳಿದ್ದಾರೆ.
ಪಕ್ಷಕ್ಕೆ ವಾಪಸ್ ಸೇರಿಸಿಕೊಳ್ಳಿ ಎಂದು ನಾನು ಕೈ ಮುಗಿಯುವುದಿಲ್ಲ. ನಾನು ಬಿಜೆಪಿಗೆ ಸೇರಿಸಿಕೊಳ್ಳಿ ಎಂದು ಯಾರ ಕೈಕಾಲು ಕೂಡ ಹಿಡಿಯುವುದಿಲ್ಲ. ನನ್ನ ಪರವಾಗಿ ಸಾಕಷ್ಟು ಜನರು ನಿಂತಿದ್ದಾರೆ ಎಂದು ವಿಜಯಪುರದಲ್ಲಿ ಶಾಸಕ ಯತ್ನಾಳ್ ಹೇಳಿಕೆ ನೀಡಿದರು.