Home ರಾಜಕೀಯ “ಅಂಬಾನಿ ಅದಾನಿ ಜೇಬು ತುಂಬಿಸಿದರೆ ಆರ್ಥಿಕ ಪ್ರಗತಿ ಆಗುತ್ತಾ?” : ಸಿಎಂ ಸಿದ್ದರಾಮಯ್ಯ

“ಅಂಬಾನಿ ಅದಾನಿ ಜೇಬು ತುಂಬಿಸಿದರೆ ಆರ್ಥಿಕ ಪ್ರಗತಿ ಆಗುತ್ತಾ?” : ಸಿಎಂ ಸಿದ್ದರಾಮಯ್ಯ

0

ಬರೀ ಅಂಬಾನಿ-ಅದಾನಿ ಜೇಬಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ.

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟರೆ ಇಡೀ ದೇಶವೇ ಪರಿತಪಿಸುವಂತಾಗಿದೆ. ಇದೇ ಕಾರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯದಂತಹ ಯೋಜನೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೀಗಾಗಿ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೂ ಹಣ ಹಾಕುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ. ಆ ಮೂಲಕ ಶ್ರಮಿಕ ವರ್ಗದ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ನಾವು ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ನಂತರ ಮಾತು ಮುಂದುವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಮಾಜಿ ಸಚಿವ ಹೆಚ್.ಆಂಜನೇಯ ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

You cannot copy content of this page

Exit mobile version