Home ರಾಜ್ಯ ಮೈಸೂರು ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ – ಮುಖ್ಯಮಂತ್ರಿ...

ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

0

ಮೈಸೂರು,ಮಾರ್ಚ್ 7: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಧಾನಿ ಮೋದಿಯವರ ಅವಧಿಯಲ್ಲಿ ದೇಶದ ಸಾಲ 218 ಲಕ್ಷ ಕೋಟಿ
ಬಿಜೆಪಿಯವರು ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯ ಪ್ರಧಾನಿ ಮೋದಿಯವರು ಸಾಲ ಮಾಡಿದ್ದಾರೆ. ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ. ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ ಮಾನದಂಡಗಳ ಮಿತಿಯಲ್ಲಿ ಸಾಲದ ಪ್ರಮಾಣ ಇದೆ. ಈ ಕಾಯ್ದೆಯಂತೆ ಸಾಲವು ಶೇ. 25 ರಷ್ಟಿರಬೇಕಿದ್ದು, ನಮ್ಮ ಸಾಲದ ಪ್ರಮಾಣ 24.94 ಇದ್ದು, ಮಿತಿಯೊಳಗೇ ಇದೆ. ಕೇಂದ್ರದ ಸಾಲದ ಪ್ರಮಾಣ 218 ಲಕ್ಷ ಕೋಟಿ ವಿದೆ. ಮೋದಿಯವರು ಅಧಿಕಾರಕ್ಕೆ ಬಂದ ನಂತರ 165 ಲಕ್ಷ ಕೋಟಿ ಸಾಲವನ್ನು ಮಾಡಿದ್ದಾರೆ. ಇದು ಸದರಿ ಕಾಯ್ದೆಯ ಪ್ರಕಾರ 55.6 % ರಷ್ಟು ಇದೆ. ಭಾರತದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕರ್ನಾಟಕ ರಾಜ್ಯದ ವಿತ್ತೀಯ ಕೊರತೆ 2.95 ರಷ್ಟಿದ್ದು, ಕಾಯ್ದೆಯು ಸೂಚಿಸಿರುವ ಜಿಡಿಪಿಯ ಶೇ. 3 ರ ಮಿತಿಯೊಳಗೆ ಇದೆ. ಕರ್ನಾಟಕದ ಜಿಡಿಪಿ 33,05,500 ಕೋಟಿ ಇದೆ. ಬಿಜೆಪಿಯವರು , ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಸೂಚಿಸಿರುವ ಮಾನದಂಡದ ಮಿತಿಯೊಳಗೆ ಸಾಲ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿದೆ
ಬಿಜೆಪಿಯ ಅಶೋಕ್ ರವರು ಈ ಬಾರಿಯ ಬಜೆಟ್ ಒಂದು ವರ್ಗಕ್ಕೆ ಸೀಮಿತಗೊಳಿಸಿರುವ ಬಜೆಟ್ ಆಗಿದೆ ಎಂದು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಈ ಬಾರಿಯ ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿ ಮಾಡಲಾಗಿದ್ದು ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಲಾಗುತ್ತದೆ, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವ ಉದ್ದೇಶವನ್ನು ಹೊಂದಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ 10 ಸಾವಿರ ಕೋಟಿ ನಷ್ಟ
ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾಗಿದ್ದ ಅನುದಾನವನ್ನು ನೀಡದಿರುವುದರಿಂದ ರಾಜ್ಯದ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಕೇಂದ್ರದ ಜಿಎಸ್ ಟಿ ದರಪರಿಷ್ಕರಣೆಯಿಂದ ರಾಜ್ಯಕ್ಕೆ 10 ಸಾವಿರ ಕೋಟಿ ನಷ್ಟವಾಗಿದೆ ಎಂದರು.

ಅವಕಾಶ ದೊರೆತರೆ ಮುಂದೆಯೂ ಬಜೆಟ್ ಮಂಡಿಸುತ್ತೇನೆ
ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ದಾಖಲೆ ಮುರಿಯುವುದು ಸಾಧನೆಯಲ್ಲ. ಆದರೆ ಜನರು ಆಶೀರ್ವದಿಸಿ, ಅವಕಾಶ ನೀಡಿದರೆ, ಖಂಡಿತ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದರು.

You cannot copy content of this page

Exit mobile version