ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನದೊಂದಿಗೆ ಆಡದಿದ್ದರೆ ಏಷ್ಯಾ ಕಪ್‌ನಿಂದಲೇ ಹೊರಗುಳಿಯಬೇಕಿತ್ತು: ಕೇಂದ್ರ ಸಚಿವ ಕಿರಣ್ ರಿಜಿಜು

ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನದ ವಿರುದ್ಧ ಆಟವಾಡಿದ್ದಕ್ಕೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷ ಕಾಂಗ್ರೆಸ್‌ನ ಹಲವು ನಾಯಕರು ಸೇರಿದಂತೆ ದೇಶಾದ್ಯಂತ ಭಾರತ, ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಸರ್ಕಾರದ ನಿರ್ಧಾರವನ್ನು ವಿವರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಭಾರತ ತನ್ನ ಸಾಂಪ್ರದಾಯಿಕ ಎದುರಾಳಿಯೊಂದಿಗೆ ದ್ವಿಪಕ್ಷೀಯ ಪಂದ್ಯವನ್ನು ಆಡುತ್ತಿಲ್ಲ, ಈ ಪಂದ್ಯಾವಳಿಯಲ್ಲಿ ಬೇರೆ ದೇಶಗಳ ತಂಡಗಳು ಕೂಡ ಭಾಗವಹಿಸುತ್ತವೆ.

ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಏಷ್ಯನ್ ಚಾಂಪಿಯನ್‌ಶಿಪ್, ವಿಶ್ವಕಪ್ ಮತ್ತು ಏಷ್ಯಾ ಕಪ್‌ನಂತಹ ಪಂದ್ಯಾವಳಿಗಳು ಬಹುರಾಷ್ಟ್ರೀಯ, ಬಹುಪಕ್ಷೀಯ ಪಂದ್ಯಗಳು. ಇದರಲ್ಲಿ ಎಲ್ಲಾ ರಾಷ್ಟ್ರಗಳು ಒಟ್ಟಾಗಿ ಆಡುತ್ತವೆ. ನಾವೇನಾದರೂ ಒಂದು ದೇಶದೊಂದಿಗೆ ಆಟವಾಡುವುದಿಲ್ಲ ಎಂದು ಹಿಂದೆ ಸರಿಯಲು ನಿರ್ಧರಿಸಿದರೆ ಏಷ್ಯಾ ಕಪ್, ಒಲಿಂಪಿಕ್ಸ್​​ನಂತಹ ಪಂದ್ಯಗಳಿಂದ ಭಾರತವನ್ನು ಹೊರಗಿಡಲಾಗುತ್ತದೆ ಎಂದು ಹೇಳಿದ್ದಾರೆ.

ಹೀಗಿರುವಾಗ ಒಂದುವೇಳೆ ಭಾರತ ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ಜೊತೆ ಆಡದಿದ್ದರೆ, ಭಾರತ ಪಂದ್ಯದಿಂದಲೇ ಹೊರಗುಳಿಯುತ್ತದೆ. ಇದು ನಮಗೇ ನಷ್ಟ. ಹೀಗಾಗಿ ಅನುಮತಿ ನೀಡಲಾಯಿತು ಎಂದಿದ್ದಾರೆ.

ಏಷ್ಯಾ ಕಪ್ ಮತ್ತು ಒಲಿಂಪಿಕ್ಸ್‌ನಂತಹ ಪಂದ್ಯಾವಳಿಗಳು ಪಾಕಿಸ್ತಾನಕ್ಕೆ ಮಾತ್ರವಲ್ಲ. ನಾವು ಪಂದ್ಯಾವಳಿಗೆ ನೆರೆಯ ದೇಶ ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಆಹ್ವಾನಿಸಿಲ್ಲ. ಅಂತಹ ಪಂದ್ಯಾವಳಿಯಲ್ಲಿ ಭಾಗವಹಿಸದಿದ್ದರೆ ಅದು ಭಾರತದ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು