Sunday, June 22, 2025

ಸತ್ಯ | ನ್ಯಾಯ |ಧರ್ಮ

ವ್ಯಾಪಾರಸ್ಥರೇ ಹುಷಾರ್! ನಿಮ್ಮ ಅಂಗಡಿಗೆ ಕನ್ನಡ ನಾಮಫಲಕ ಹಾಕದಿದ್ರೆ ಬೀಗ ಬೀಳುತ್ತೆ

ಬೆಂಗಳೂರು: ನಗರದಲ್ಲಿರುವ ಯಾವುದೇ ಅಂಗಡಿಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬಳಸದಿದ್ದರೆ, ಅಂತ ಅಂಗಡಿಗಳಿಗೆ ಬೀಗ ಹಾಕಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.
ಈಗಾಗಲೇ ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ.
ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ ಬೀಗ ಹಾಕುವ ಮೂಲಕ ಬಿಬಿಎಂಪಿ ಪೂರ್ವ ವಲಯದ ಸಿಬ್ಬಂದಿ ಎಚ್ಚರಿಕೆ ನೀಡಿದರು. ಈಗಿರುವ ನಾಮಫಲಕಗಳಲ್ಲಿ ಇಂಗ್ಲಿಷ್‌ ಅಕ್ಷರಗಳನ್ನು ಮುಚ್ಚಿ, ಕನ್ನಡವನ್ನು ಚಿಕ್ಕದಾಗಿ ಕಾಣುವಂತೆ ಕೆಲವು ಮಾಡಿದ್ದಾರೆ. ಇದು ಸರಿಯಲ್ಲ. ಶೇ 60ರಷ್ಟು ಕನ್ನಡ ಇರಲೇಬೇಕು ಎಂದು ಮಳಿಗೆಯವರಿಗೆ ಅಧಿಕಾರಿಗಳು ತಾಕೀತು ಮಾಡಿದರು.
ವಲಯ ಆಯುಕ್ತೆ ಸ್ನೇಹಲ್, ವಲಯ ಜಂಟಿ ಆಯುಕ್ತೆ ಪಲ್ಲವಿ ಅವರ ನಿರ್ದೇಶನದಂತೆ ಶಾಂತಿನಗರ ಹಾಗೂ ಸಿ.ವಿ ರಾಮನ್‌ನಗರ ವ್ಯಾಪ್ತಿಯಲ್ಲಿ ವಲಯ ಆರೋಗ್ಯಾಧಿಕಾರಿ ಡಾ. ಸವಿತಾ ನೇತೃತ್ವದಲ್ಲಿ ಮಳಿಗೆಗಳ ನಾಮಫಲಕಗಳನ್ನು ಪರಿಶೀಲಿಸಿದರು.
ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ರೆಸಿಡೆನ್ಸಿ ರಸ್ತೆಯಲ್ಲಿ ಇದುವರೆಗೆ 200ಕ್ಕೂ ಹೆಚ್ಚು ವಾಣಿಜ್ಯ ಮಳಿಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 170ಕ್ಕೂ ಹೆಚ್ಚು ಮಳಿಗೆಗಳಲ್ಲಿ ಈಗಾಗಲೇ ಕನ್ನಡ ನಾಮಫಲಕಗಳನ್ನು ಅಳವಡಿಸಿಕೊಂಡಿರುತ್ತಾರೆ. ಇನ್ನು ಕನ್ನಡ ನಾಮಫಲಕ ಅಳವಡಿಸದೇ ಇರುವ ಮಳಿಗೆಗಳ ಮಾಲೀಕರಿಗೆ ಅಂತಿಮ ತಿಳಿವಳಿಕೆ ಪತ್ರ ನೀಡಿ ಕೂಡಲೇ ನಾಮಫಲಕ ಬದಲಾಯಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕನ್ನಡ ಬಳಸದೇ ಇರುವ ನಾಮಫಲಕ ಕಿತ್ತುಹಾಕುವ ಮೂಲಕ ದೊಡ್ಡ ಮಟ್ಟದ ಪ್ರತಿಭಟನೆ ಮಾಡಿದ್ದರು. ಸರ್ಕಾರ ಕನ್ನಡ ವಿಧೇಯಕ ಕಾನೂನು ಜಾರಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page