ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಗ್ರಾಮಸ್ಥರ ಜಾಗೃತಿಯಿಂದ ಅಕ್ರಮ ಪಶು ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಿಂಸಾತ್ಮಕವಾಗಿ ಪಶುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ನಡೆದಿದೆ.
ಕಿಗ್ಗಾ ಪ್ರದೇಶದಿಂದ ಮಾಗಲು–ಹೊಸಕೊಪ್ಪ ಮಾರ್ಗವಾಗಿ ಸಾಗುತ್ತಿದ್ದ ಸರಕು ವಾಹನದಲ್ಲಿ ಎಮ್ಮೆ ಮತ್ತು ಕೋಣಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಪಶುಗಳನ್ನು ತುಂಬಿಕೊಂಡಿದ್ದ ರೀತಿಯೇ ಅನುಮಾನ ಹುಟ್ಟಿಸಿದ್ದು, ತಕ್ಷಣವೇ ಗ್ರಾಮಸ್ಥರು ವಾಹನವನ್ನು ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ, ಪಶು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ಮಾನ್ಯ ದಾಖಲೆಗಳು ಇಲ್ಲದಿರುವುದು ಪತ್ತೆಯಾಗಿದೆ. ಜೊತೆಗೆ ಪಶುಗಳನ್ನು ಅಮಾನುಷ ರೀತಿಯಲ್ಲಿ ಸಾಗಿಸುತ್ತಿದ್ದುದೂ ಗಮನಕ್ಕೆ ಬಂದಿದೆ.
ಈ ಸಂಬಂಧ ನಾಲ್ವರನ್ನು ಬಂಧಿಸಿರುವ ಪೊಲೀಸರು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪಶುಗಳ ಸುರಕ್ಷತೆ ಕುರಿತು ಚರ್ಚೆಗೆ ಕಾರಣವಾಗಿದೆ.
