ದೆಹಲಿ: ಸ್ವತಂತ್ರ ಮತ್ತು ಸಾರ್ವಭೌಮ ಪ್ಯಾಲೆಸ್ತೀನ್ ರಾಷ್ಟ್ರದ ರಚನೆಯನ್ನು ಭಾರತ ಬೆಂಬಲಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದಾರೆ. ಭಾರತ ಹಲವು ವರ್ಷಗಳಿಂದ ಇದೇ ಧೋರಣೆಯನ್ನು ಉಳಿಸಿಕೊಂಡು ಬಂದಿದೆ ಎಂದರು.
ಸ್ವತಂತ್ರ ಪ್ಯಾಲೆಸ್ತೀನ್ ರಚನೆಗಾಗಿ ಮಾತುಕತೆಯನ್ನು ಪುನರಾರಂಭಿಸಲು ಕೋರಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ದೇಶಗಳು ಶಾಂತಿಯುತವಾಗಿ ಬಾಳಬೇಕು ಎಂದು ಭಾರತ ಬಯಸುತ್ತದೆ ಎಂದು ಅವರು ಹೇಳಿದ್ದಾರೆ.
ಪ್ಯಾಲೆಸ್ತೀನ್ ಜನರು ಗುರುತಿಸಲಾದ ಗಡಿಯೊಳಗೆ ಸುರಕ್ಷಿತ ಜೀವನ ನಡೆಸಬೇಕೆಂಬುದು ಭಾರತದ ನೀತಿಯಾಗಿದ್ದು, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅರಿಂದಮ್ ಬಾಗ್ಚಿ ಸ್ಪಷ್ಟಪಡಿಸಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧ ಆರಂಭವಾದ ನಂತರ ಪ್ಯಾಲೆಸ್ತೀನ್ ವಿಚಾರದಲ್ಲಿ ಭಾರತದಿಂದ ಮೊದಲ ಹೇಳಿಕೆಯಾಗಿದೆ. ಇಸ್ರೇಲ್ ಮೇಲಿನ ಹಮಾಸ್ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು ಗೊತ್ತೇ ಇದೆ.
ಈ ನಡುವೆ ಕರ್ನಾಟಕ ಪೊಲೀಸರು ಹೊಸಪೇಟೆಯಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕಾಗಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಇಲ್ಲಿನ ಸಿದ್ದಲಿಂಗಪ್ಪ ಚೌಕಿಯ ನಿವಾಸಿ, ಅಲ್ಪಸಂಖ್ಯಾತ ಇಲಾಖೆ ಕಚೇರಿಯಲ್ಲಿ ಅಟೆಂಡರ್ ಕೆಲಸ ಮಾಡುತ್ತಿದ್ದ ಅಲಂ ಬಾಷಾ (20) ಎಂದು ಗುರುತಿಸಲಾಗಿದ್ದು. ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
`ಆರೋಪಿಯ ವಿರುದ್ಧ ಸ್ವಯಂ ಪ್ರೇರಣೆಯಿಂದ ಸಿ.ಆರ್ಪಿಸಿ 108-151 ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಿ ತಹಶೀಲ್ದಾರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಶ್ರೀಹರಿಬಾಬು ಬಿ.ಎಲ್. ತಿಳಿಸಿರುವುದಾಗಿ ʼಪ್ರಜಾವಾಣಿʼ ವರದಿ ಮಾಡಿದೆ.