ರಾಮನಗರ, ನವೆಂಬರ್ 09: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಶಾಲೆಗೆ 25 ಎಕರೆ ದಾನ ನೀಡೀದ್ದೇನೆ ಎಂಬ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿಯವರು “ಅಷ್ಟು ಜಮೀನು ಕೊಡಲಿಕ್ಕೆ ಅವರೇನು ಮಹಾರಾಜರ ವಂಶಸ್ಥರೇ? ಎಂದು ಪ್ರಶ್ನಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ನಡುವೆ ಮುಕುಂದ ಗ್ರಾಮದಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, “ನಿಜವಾಗಿಯೂ ಅವರು ಜಮೀನು ಕೊಟ್ಟಿದ್ದಾರೆಯೇ? ಕೊಟ್ಟಿದ್ದು ನಿಜವಾದರೆ 25 ಎಕರೆ ಭೂಮಿಯ ದಾಖಲೆಯನ್ನು ಜನರೆದುರು ಇಡಲಿ” ಎಂದು ಸವಾಲೊಡ್ಡಿದರು.
“ಸುಳ್ಳು ಹೇಳುವುದಕ್ಕೂ ಒಂದು ಮಿತಿಯಿರಬೇಕು. ನಾನು ಯಾವತ್ತೂ ಇವರ ರೀತಿ ಅದು ಮಾಡಿದ್ದೇನೆ ಇದು ಮಾಡಿದ್ದೇನೆ ಎಂದು ಬೋರ್ಡ್ ಹಾಕಿಕೊಂಡು ತಿರುಗಿಲ್ಲ. ಆದರೆ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ನನ್ನ ಕೊಡುಗೆ ಏನು ಎನ್ನುವುದು ಜನರಿಗೆ ಗೊತ್ತು” ಎಂದು ಅವರು ಹೇಳಿದರು.
ನಾನು ಸಿಎಂ ಆಗುವ ಮೊದಲು ರಾಜ್ಯದಲ್ಲಿ ಎಷ್ಟು ಕಾಲೇಜು, ಹೈಸ್ಕೂಲ್ ಗಳು ಇದ್ದವು? ನನ್ನ 20 ತಿಂಗಳ ಆಡಳಿತದಲ್ಲಿ ಎಷ್ಟಾದವು ಎಂಬುದಕ್ಕೆ ದಾಖಲೆಗಳೇ ಮಾಹಿತಿ ಕೊಡುತ್ತವೆ. ಯಾರಾದರೂ ತೆಗೆದು ನೋಡಬಹುದು. ಶಿಕ್ಷಣ ಕ್ಷೇತ್ರಕ್ಕೆ ಈ ವ್ಯಕ್ತಿಯ ಕೊಡುಗೆ ಏನು? ಸಾತನೂರು, ಕನಕಪುರ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಏನು ಮಾಡಿದ್ದಾರೆ. ಪಟ್ಟಿ ಮಾಡಲಿ. ಇಷ್ಟು ವರ್ಷ ಆಡಳಿತ ಮಾಡಿರುವವರಿಗೆ ಅವರ ತವರೂರು ದೊಡ್ಡಾಲಹಳ್ಳಿಯಲ್ಲಿ ಮತಗಳ ಲೀಡ್ ಬರುತ್ತಿಲ್ಲ ಯಾಕೆ? ಇವರು 25 ಎಕರೆ ಕೊಟ್ಟಿದ್ದಾರೋ ಅಥವಾ 25 ಗುಂಟೆ ಕೊಟ್ಟಿದ್ದಾರೋ ಗೊತ್ತಿಲ್ಲ.
ನಾನು ಜನ ಸೇವಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.