ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನ ಸೋನಿಯಾ ಗಾಂಧಿಯವರು ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸಲು ಹೇಳಿದರು ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ಗೀತೆಯ ಬಗ್ಗೆ ಸೋನಿಯಾ ಗಾಂಧಿಯವರ ಬದ್ಧತೆಯನ್ನು ಪ್ರಶ್ನಿಸಿದ ಕುಮಾರಸ್ವಾಮಿ, ಸೋನಿಯಾ ಗಾಂಧಿ ಅವರ ಇಟಲಿ ಮೂಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರು ರಚಿಸಿರುವ ‘ವಂದೇ ಮಾತರಂ’ ಗೀತೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು. ರಾಷ್ಟ್ರ ಗೀತೆಗೆ ಕಾಂಗ್ರೆಸ್ ಅನಗತ್ಯವಾಗಿ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಅವರು ಆರೋಪಿಸಿದರು. ವಂದೇ ಮಾತರಂ ಗೀತೆಗೆ ಸ್ವಾತಂತ್ರ್ಯ ಹೋರಾಟದೊಂದಿಗೆ ಐತಿಹಾಸಿಕ ನಂಟಿದೆ ಎಂದು ಹೇಳಿದ ಅವರು, ಮಹಾತ್ಮ ಗಾಂಧೀಜಿ ಅವರು ವಂದೇ ಮಾತರಂ ಹಾಡುತ್ತಿದ್ದ ಕಾಂಗ್ರೆಸ್ ಅಧಿವೇಶನಗಳಲ್ಲಿ ಭಾಗವಹಿಸಿದ್ದರು. ರವೀಂದ್ರನಾಥ ಟ್ಯಾಗೋರ್ ಕೂಡ ವಂದೇ ಮಾತರಂ ಹಾಡಿದ್ದರು. ಅಂತಹ ಇತಿಹಾಸ ಹೊಂದಿರುವ ಕಾಂಗ್ರೆಸ್ ವಂದೇ ಮಾತರಂ ವಿಚಾರದಲ್ಲಿ ಈಗ ಇಂತಹ ಸಂಕುಚಿತ ಮನೋಭಾವ ಪ್ರದರ್ಶಿಸಬಾರದು ಎಂದು ಹೇಳಿದರು.
ವಂದೇ ಮಾತರಂ ಹಾಡುವುದಕ್ಕೆ ಸೋನಿಯಾ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಆರೋಪಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸೋನಿಯಾ ಗಾಂಧಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಸೋನಿಯಾ ಗಾಂಧಿ ನಮ್ಮ ದೇಶದವರೇ? ಮದುವೆಯ ನಂತರ ಅವರು ಭಾರತಕ್ಕೆ ಬಂದವರು. ಅವರ ನರಗಳಲ್ಲಿ ಹರಿಯುತ್ತಿರುವುದು ಭಾರತೀಯ ರಕ್ತವಲ್ಲ, ಇಟಲಿ ರಕ್ತ ಅಲ್ಲವೇ?” ಎಂದು ಪ್ರಶ್ನಿಸಿದರು. ಈ ಬೆಳವಣಿಗೆಗಳನ್ನು ಜನರು ಗಮನಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೂಲಕ ಜನರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಂದೇ ಮಾತರಂ ಗೀತೆಗೆ ಕಾಂಗ್ರೆಸ್ ಅಗೌರವ ತೋರುತ್ತಿದೆ ಎಂದೂ ಅವರು ಆರೋಪಿಸಿದರು.
