ಹೊಸ ಪ್ರಜಾ ಆಂದೋಲನ ಘೋಷಿಸಿದ ಅಣ್ಣಾಮಲೈ: ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕರ ಸಾಲು ಸಾಲು ರಾಜೀನಾಮೆ!

ಚೆನ್ನೈ: ಕಳೆದ ಕೆಲವು ದಿನಗಳಿಂದ ತಮಿಳುನಾಡು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಊಹಾಪೋಹಗಳಿಗೆ ತೆರೆ ಎಳೆದಿರುವ ಕೆ. ಅಣ್ಣಾಮಲೈ, ತಾವು ಬಿಜೆಪಿಗೆ ರಾಜೀನಾಮೆ ನೀಡಿರುವುದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಇದರ ಬೆನ್ನಲ್ಲೇ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಹೊಸ ಸಾರ್ವಜನಿಕ ಆಂದೋಲನವೊಂದನ್ನು ಪ್ರಾರಂಭಿಸುವುದಾಗಿ ಅವರು ಘೋಷಿಸಿದ್ದಾರೆ.

‘ಅಣ್ಣಾಮಲೈ ಮಕ್ಕಳ್ ಇಯಕ್ಕಂ’ (AMI) ಹೆಸರಿನಲ್ಲಿ ಈ ಹೊಸ ಜನಪರ ಚಳವಳಿಯನ್ನು ಅವರು ಮುನ್ನಡೆಸಲಿದ್ದಾರೆ. ಈ ಕುರಿತು ಮಾತನಾಡಿರುವ ಅಣ್ಣಾಮಲೈ, “ನಮ್ಮ ಆಂದೋಲನದಲ್ಲಿ ಯಾವುದೇ ಕುಟುಂಬ ರಾಜಕಾರಣಕ್ಕೆ ಆಸ್ಪದ ಇರುವುದಿಲ್ಲ. ಶಾಶ್ವತ ನಾಯಕರು, ಸಂಸದರು ಅಥವಾ ಶಾಸಕರು ಎಂಬ ಹಳೆಯ ಸಾಂಪ್ರದಾಯಿಕ ಕಲ್ಪನೆಗಳನ್ನು ನಾವು ಮುರಿಯಲಿದ್ದೇವೆ. ನಾವೆಲ್ಲರೂ ಮೂಢನಂಬಿಕೆಯ ಹಳೆಯ ರಾಜಕಾರಣದಿಂದ ಹೊರಬಂದು, ಸಾಮಾನ್ಯ ಜನರಿಗಾಗಿ ಹೊಸ ರಾಜಕೀಯ ವ್ಯವಸ್ಥೆಯನ್ನು ನಿರ್ಮಿಸಬೇಕಾಗಿದೆ” ಎಂದು ತಿಳಿಸಿದ್ದಾರೆ.

ಕೆ. ಅಣ್ಣಾಮಲೈ ಅವರು ಪಕ್ಷ ತೊರೆದ ಕೆಲವೇ ಗಂಟೆಗಳಲ್ಲಿ ತಮಿಳುನಾಡು ಬಿಜೆಪಿಯಲ್ಲಿ ಭಾರಿ ಬಿರುಕು ಮೂಡಿದ್ದು, ಪಕ್ಷದ ಹಲವು ಪ್ರಮುಖ ಹಾಗೂ ಹಿರಿಯ ನಾಯಕರು ಸಾమూಹಿಕವಾಗಿ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಮತ್ತು ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ಅವರು ತಮ್ಮ ಸ್ಥಾನಗಳಿಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ಪೈಕಿ ಕರು ನಾಗರಾಜನ್ ಅವರು ಅಣ್ಣಾಮಲೈ ಅವರ ನೇತೃತ್ವದಲ್ಲಿ ಶೀಘ್ರದಲ್ಲೇ ರಚನೆಯಾಗಲಿರುವ ಹೊಸ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವ ಇಚ್ಛೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಪಕ್ಷದೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು