ಕಲಬುರಿಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಆಕಸ್ಮಿಕವಾಗಿ ಬಿಸಿ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಮೂರು ದಿನಗಳ ನಂತರ ಎರಡನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪ್ರಾಣ ಕಳೆದುಕೊಂಡಿದ್ದಾಳೆ.
ಸುಟ್ಟ ಗಾಯಗಳಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ನ.16ರಂದು ಶಾಲೆಗೆ ಹೊಂದಿಕೊಂಡಿರುವ ಮಧ್ಯಾಹ್ನದ ಊಟದ ಅಡುಗೆ ಕೋಣೆಯಲ್ಲಿ ನಡೆದ ಈ ದುರಂತದಲ್ಲಿ ಏಳು ವರ್ಷದ ಮಹಾಂತಮ್ಮ ಶಿವಪ್ಪ ತಳವಾರ ಗಂಭೀರವಾಗಿ ಗಾಯಗೊಂಡಿದ್ದಳು.
ಈ ಘಟನೆಯಿಂದಾಗಿ ಶಾಲೆಯ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಬ್ಬರು ಸಿಬ್ಬಂದಿ ಮತ್ತು ಮುಖ್ಯ ಅಡುಗೆಯವರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಗುವಿಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಚೌದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲೆಯ ಇನ್ನೊಂದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಕೆಯ ಆರೋಗ್ಯದ ಸ್ಥಿತಿ ಹದಗೆಟ್ಟಿದ್ದು, ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಭಾನುವಾರ ಮೃತಪಟ್ಟಿದ್ದಾಳೆ ಎಂದು ಅವರು ಹೇಳಿದರು. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ ಅಡಿಯಲ್ಲಿ ನಿರ್ಲಕ್ಷದಿಂದಾಗಿ ಮರಣದ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ, ಈ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಆ ಅಧಿಕಾರಿ ತಿಳಿಸಿದ್ದಾರೆ.