ಬೆಂಗಳೂರು: ಸಿದ್ದರಾಮಯ್ಯ ಸರಕಾರ ರೂಪಿಸಿದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಮಾಡಿದೆ. ಎಸಿಬಿಯಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಅದು ಆದೇಶ ನೀಡಿದೆ.
2016 ರಲ್ಲಿ ಸಿದ್ದರಾಮಯ್ಯ ಸರಕಾರ ಎಸಿಬಿಯನ್ನು ರಚಿಸಿತ್ತು.ಇದನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ ಅವರು ಸಾರ್ವಜನಿಕ ಹಿತಾಸಕ್ತಿ ಆರ್ಜಿಗಳನ್ನು ಸಲ್ಲಿಸಿದ್ದರು. ವಿಚಾರಣೆ ಬಳಿಕ ಇಂದು ನ್ಯಾ.ಬಿ ವೀರಪ್ಪ ಹಾಗೂ ನ್ಯಾ. ಕೆಎಸ್ ಹೇಮಲೇಖ ಅವರಿದ್ದ ಪೀಠ ಈ ಆದೇಶ ನೀಡಿದೆ.
ಆದೇಶದ ಬಳಿಕ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯʼಹೈಕೋರ್ಟ್ ತೀರ್ಪನ್ನು ಗೌರವಿಸುತ್ತೇನೆ.ಆದೇಶದಲ್ಲಿ ಏನಿದೆ ಎಂಬುದನ್ನು ನೋಡಿಲ್ಲ. ನೋಡಿದ ಬಳಿಕ ಪ್ರತಿಕ್ರಿಯಿಸುವೆʼ ಎಂದಿದ್ದಾರೆ.