ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಪಕ್ಷವು “ದಾರಿ ತಪ್ಪಿಸುವ, ಸುಳ್ಳು ಮತ್ತು ಆತಂಕ ಸೃಷ್ಟಿಸುವ” ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಿಯೋಗವು ಬುಧವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.
“ಚುನಾವಣಾ ಆಯೋಗದ ಅಧಿಕಾರಿಗಳು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಆದರೆ, ಈ ಇಡೀ ಪ್ರಕ್ರಿಯೆಯು ಬಿಜೆಪಿಯ ಇಶಾರೆಯಂತೆ ನಡೆಯುತ್ತಿದೆ ಎಂದು ಕಾಂಗ್ರೆಸ್ ಕರಪತ್ರಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಹರಡುತ್ತಿದೆ” ಎಂದು ಬಿಜೆಪಿ ತನ್ನ ದೂರಿನಲ್ಲಿ ತಿಳಿಸಿದೆ. ಕಾಂಗ್ರೆಸ್ ಹಂಚುತ್ತಿರುವ ಕರಪತ್ರದ ಪ್ರತಿಯನ್ನೂ ಮನವಿಯೊಂದಿಗೆ ಆಯೋಗಕ್ಕೆ ಸಲ್ಲಿಸಲಾಗಿದೆ.
ಸುಳ್ಳು ಪ್ರಚಾರದ ಮೂಲಕ ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್ ಪಕ್ಷ ಮತ್ತು ಅದರ ಕಾರ್ಯಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಪಕ್ಷದ ವಿವಿಧ ಪ್ರಕೋಷ್ಟಗಳ ಸಂಚಾಲಕ ಎಸ್. ದತ್ತಾತ್ರಿ ಅವರ ನೇತೃತ್ವದ ನಿಯೋಗವು ಈ ದೂರನ್ನು ಸಲ್ಲಿಸಿದೆ.
