ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಬಳಕೆಯ ಮಾಡುವಂತೆ ಕರ್ನಾಟಕ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಕರ್ನಾಟಕ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನವರಿ 30 ಮಂಗಳವಾರ ತಿಳಿಸಿದ್ದಾರೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ (Kannada Language Comprehensive Development Act) ತಿದ್ದುಪಡಿ ತರಲು ಮತ್ತು ನಾಮ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲು ಹೊರಡಿಸಲಾದ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಜನವರಿ 5ರಂದು ಅನುಮೋದನೆ ನೀಡಿತ್ತು.
“ನಾವು ಕಾನೂನನ್ನು ರಚಿಸಿದ್ದೇವೆ ಮತ್ತು ಸುಗ್ರೀವಾಜ್ಞೆಯನ್ನು ಅನುಮೋದಿಸಿದ್ದೇವೆ. ರಾಜ್ಯಪಾಲರು ಒಪ್ಪಿಗೆ ನೀಡಬಹುದಿತ್ತು. ಬದಲಿಗೆ ವಿಧಾನಸಭೆಯಲ್ಲಿ ಅಂಗೀಕಾರ ಆಗಬೇಕು ಎಂದು ವಾಪಸ್ ಕಳುಹಿಸಿದ್ದಾರೆ,” ಎಂದು ಡಿಕೆಶಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅಂಗಡಿ- ಉದ್ಯಮಗಳನ್ನು ಗುರಿಯಾಗಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿತ್ತು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತು ರಾಜಭವನದ ನಡುವಿನ ಮೊದಲ ಭಿನ್ನಾಭಿಪ್ರಾಯ ಈಗ ಬಹಿರಂಗವಾಗಿದೆ.
ಮುಂದಿನ ತಿಂಗಳು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನಕ್ಕೆ ಮುನ್ನವೇ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದು ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರ ಅಸಹಕಾರದ ಪ್ರಕರಣಗಳಲ್ಲಿ ಒಂದಾಗಲಿದೆ. ಗೆಹ್ಲೋಟ್ ಫೆಬ್ರವರಿ 12 ರಂದು ಶಾಸಕಾಂಗದ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಶಿವಕುಮಾರ್ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರು ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದರು. ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಒತ್ತಾಯಿಸಿದ ನಂತರ ಗೆಹ್ಲೋಟ್ ಮೂರು ಮಸೂದೆಗಳಿಗೆ ಸಹಿ ಹಾಕಿದರು.
ಕ್ಲಿಯರ್ ಮಾಡಿದ ಬಿಲ್ಗಳಲ್ಲಿ ಒಂದು ವೈದ್ಯಕೀಯ ಪದವೀಧರರಿಗೆ ಕಡ್ಡಾಯ ಗ್ರಾಮೀಣ ಸೇವೆಯನ್ನು ತೆಗೆದುಹಾಕುವುದೂ ಸೇರಿದೆ. ಆದರೆ ಬೆಳಗಾವಿ ಅಧಿವೇಶನದಲ್ಲಿ ಅಂಗೀಕರಿಸಲಾದ 17 ವಿಧೇಯಕಗಳ ಪೈಕಿ ರಾಜ್ಯಪಾಲರು ಕೇವಲ ಐದಕ್ಕೆ ಮಾತ್ರ ಒಪ್ಪಿಗೆ ನೀಡಿದ್ದಾರೆ.
ಅಲ್ಲದೇ, ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರದ್ದುಗೊಳಿಸುವ ನಿರ್ಧಾರವು ರಾಜ್ಯ ಮತ್ತು ರಾಜಭವನದ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸುವ ಸಾಧ್ಯತೆ ಇದೆ. ಇತ್ತೀಚೆಗೆ People’s Forum for Karnataka Education ರಾಜ್ಯದಲ್ಲಿ ಎನ್ಇಪಿಯ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ಮಧ್ಯಪ್ರವೇಶಿಸುವಂತೆ ಕೋರಿ 10 ಲಕ್ಷ ಸಹಿ ಸಂಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು.