ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದವು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರ ಹೇಳಿಕೆಗಳ ನಂತರ ಭುಗಿಲೆದ್ದಿದ್ದು, ವಿವಾದಾತ್ಮಕ ವಿಷಯದ ಬಗ್ಗೆ ಮುಂದಿನ ವಾರ ಸರ್ವಪಕ್ಷಗಳ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.
ಗಡಿ ವಿವಾದವನ್ನು ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಪರಿಹರಿಸುವ ಮಹಾರಾಷ್ಟ್ರ ಸರ್ಕಾರದ ಉದ್ದೇಶಗಳ ಬಗ್ಗೆ ಸರ್ವಪಕ್ಷಗಳ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ʼಗಡಿ ವಿವಾದ ಮುಗಿದಿದೆ ಆದರೆ ಮಹಾರಾಷ್ಟ್ರವು ಈ ವಿವಾದವನ್ನು ಎತ್ತಿ ಹಿಡಿಯುತ್ತಿದೆ. ಗ್ರಾಮ ಪಂಚಾಯಿತಿಯ ಪರಿಹಾರ ಮತ್ತು ಇತರ ಸಂಬಂಧಿತ ಸಮಸ್ಯೆಗಳು ನಮ್ಮೊಂದಿಗೆ ಇವೆ (ನಮ್ಮ ಪರವಾಗಿ). ಇದೆಲ್ಲವನ್ನೂ ಸುಪ್ರೀಂ ಕೋರ್ಟ್ ನಲ್ಲಿ ಚರ್ಚಿಸಲಾಗುವುದುʼ ಎಂದರು.
ಎರಡು ರಾಜ್ಯಗಳ ಗಡಿಯಲ್ಲಿರುವ ಹಲವಾರು ಗ್ರಾಮಗಳ ‘ಮಾಲೀಕತ್ವ’ಕ್ಕೆ ಸಂಬಂಧಿಸಿದ ಗಡಿ ವಿವಾದವನ್ನು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಕರ್ನಾಟಕದ ವಾದಗಳನ್ನು ಸುಪ್ರೀಂ ಕೋರ್ಟ್ ಮುಂದೆ ಮಂಡಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಾತುಕತೆಯ ಮೂಲಕ ಈ ಬಿಕ್ಕಟ್ಟನ್ನು ಪರಿಹರಿಸುವ ಬಗ್ಗೆ ಮಾತನಾಡಲಾಗುತ್ತಿದೆ ಎನ್ನುವುದರ ಬಗ್ಗೆ ನನಗೆ ಮಾಹಿತಿ ಇದೆ ಎಂದು ಬೊಮ್ಮಾಯಿ ಹೇಳಿದರು.
ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದೆ. ಹೀಗಾಗಿ ಕರ್ನಾಟಕ ಸರ್ಕಾರವು ಸರ್ವಪಕ್ಷಗಳ ಸಭೆ ನಡೆಸಿ, ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ-ಪ್ರತಿವಾದಗಳ ಬಗ್ಗೆ ಮತ್ತು ಗಡಿ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಚರ್ಚೆ ನಡೆಸಲಿದೆ ಎಂದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕಾನೂನು ತಂಡವನ್ನು ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರವರು ಒತ್ತಾಯಿಸಿದ ನಂತರ ಬೊಮ್ಮಾಯಿ ಅವರು ಸರ್ವಪಕ್ಷಗಳ ಸಭೆ ನಡೆಸಲು ನಿರ್ಧರಿಸಿದ್ದಾರೆ.