ಮಂಡ್ಯ: “2028ರ ವಿಧಾನಸಭಾ ಚುನಾವಣೆಯ ನಂತರ ಕರ್ನಾಟಕದಲ್ಲಿ ಬಿಜೆಪಿಯ ನೇತೃತ್ವದ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಜೆಡಿಎಸ್ ಬೆಂಬಲದೊಂದಿಗೆ ನಾವು ಅಧಿಕಾರ ಹಿಡಿಯಲಿದ್ದೇವೆ. ಮುಖ್ಯಮಂತ್ರಿ ಯಾರು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಿರ್ಧರಿಸಲಿದ್ದಾರೆ,” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ತಿಳಿಸಿದರು.
ಮಂಗಳವಾರ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹೇಳಿಕೆ ನೀಡಿದ್ದಾರೆ. “ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದಾರೆ. ಒಂದು ವೇಳೆ ಪಕ್ಷದ ಆಶೀರ್ವಾದ ನನ್ನ ಮೇಲಿದ್ದರೆ, ನಾನು ಕೂಡ ಮುಖ್ಯಮಂತ್ರಿಯಾಗಬಹುದು,” ಎಂದು ಅಶೋಕ ಅವರು ತಮ್ಮ ಆಸೆಯನ್ನು ವ್ಯಕ್ತಪಡಿಸಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ: “ಪ್ರಸ್ತುತ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮ ಮೊದಲ ಆದ್ಯತೆಯಾಗಿದೆ. ಅದರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ರಾಜ್ಯದ ಆಡಳಿತವು ಕೋಮಾ ಸ್ಥಿತಿಗೆ ತಲುಪಿದ್ದು, ಭ್ರಷ್ಟಾಚಾರದಲ್ಲಿ ಮುಳುಗಿದೆ,” ಎಂದು ಅವರು ಟೀಕಿಸಿದರು.
ಮುಂದುವರಿದು ಮಾತನಾಡಿದ ಅವರು ಕಾಂಗ್ರೆಸ್ನ ಆಂತರಿಕ ಬಿಕ್ಕಟ್ಟನ್ನು ಕೆದಕುತ್ತಾ, “ನವೆಂಬರ್ನಲ್ಲೇ ಮುಖ್ಯಮಂತ್ರಿ ಬದಲಾವಣೆ ಆಗಬೇಕಿತ್ತು, ಆದರೆ ಈಗ ಅದನ್ನು ಮುಂದೂಡಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಈ ಬಗ್ಗೆ ಗದ್ದಲ ಎಬ್ಬಿಸಿದ್ದಾರೆ. ಇಂತಹ ಭಿನ್ನಾಭಿಪ್ರಾಯಗಳಿಂದಾಗಿ ಸರ್ಕಾರ ನಿದ್ದೆಗೆ ಜಾರಿದೆ. ಶಾಸಕರು ಡಿ.ಕೆ. ಶಿವಕುಮಾರ್ ಅವರ ಮಾತುಗಳಿಗೆ ಗೌರವ ನೀಡುತ್ತಿಲ್ಲ; ಅವರ ವರ್ಚಸ್ಸು ಕುಗ್ಗುತ್ತಿದೆ,” ಎಂದು ಅಶೋಕ ಲೇವಡಿ ಮಾಡಿದರು.
“ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ಕಾಂಗ್ರೆಸ್ ನಾಯಕರು ಕೇವಲ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಹಿಂದೆ ಅವರು ಜೆಡಿಎಸ್ ಅನ್ನು ‘ಜಗಳಗಂಟರ ಪಾರ್ಟಿ’ ಎಂದು ಕರೆಯುತ್ತಿದ್ದರು, ಆದರೆ ಇಂದು ಕಾಂಗ್ರೆಸ್ ಆ ಸ್ಥಾನವನ್ನು ಆಕ್ರಮಿಸಿಕೊಂಡಿದೆ,” ಎಂದು ಅವರು ವ್ಯಂಗ್ಯವಾಡಿದರು.
