ಮೈಸೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಆದೇಶವನ್ನು ಪಾಲಿಸಿ ಕರ್ನಾಟಕ ತನ್ನ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡಲು ಪ್ರಾರಂಭಿಸಿದೆ.
ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ (ಕೆಆರ್ಎಸ್) ಮತ್ತು ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಹೊರ ಹರಿವು ಹೆಚ್ಚಾಗಿದೆ. ಮಂಗಳವಾರ ರಾತ್ರಿಯಿಂದಲೇ ಹೊರ ಹರಿವಿನ ಪ್ರಮಾಣ ಹೆಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ ಇವುಗಳಿಂದ ತಮಿಳುನಾಡಿಗೆ 6,398 ಕ್ಯೂಸೆಕ್ ನೀರು ಹರಿದು ಬಂದಿದೆ. ಸೆ.12ರವರೆಗೆ 15 ದಿನಗಳ ಕಾಲ ನೀರು ಬಿಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಎಂಎ ಮಂಗಳವಾರ ನಿರ್ದೇಶನ ನೀಡಿದೆ.
ತಮಿಳುನಾಡಿಗೆ ನೀರು ಬಿಟ್ಟರೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘಗಳು ಎಚ್ಚರಿಕೆ ನೀಡಿದ್ದರೂ ಕರ್ನಾಟಕ ಸರ್ಕಾರ ಈ ನಿರ್ಧಾರ ಕೈಗೊಳ್ಳಲೇಬೇಕಿದೆ. ಈ ವಾರ ಸುಪ್ರೀಂ ಕೋರ್ಟ್ನಲ್ಲಿ ಕಾವೇರಿ ಜಲವಿವಾದ ಪ್ರಕರಣದ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನೀರು ಬಿಡಲಾಗಿದೆ. ಮಳೆ ಕೊರತೆಯ ಪರಿಸ್ಥಿತಿಯಿಂದಾಗಿ ಕಾವೇರಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಬುಧವಾರದ ವೇಳೆಗೆ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ 101.58 ಅಡಿ ಇತ್ತು. ಕಳೆದ ವರ್ಷ ಇದೇ ದಿನ ನೀರಿನ ಮಟ್ಟ 123.92 ಅಡಿ ಇತ್ತು.