Monday, June 17, 2024

ಸತ್ಯ | ನ್ಯಾಯ |ಧರ್ಮ

ಕೆಂಪೇಗೌಡರ ಪುತ್ತಳಿ ಅನಾವರಣ: ಬಿಜೆಪಿಯಿಂದ ದೇವೇಗೌಡರಿಗೆ ಅವಮಾನ : ಜೆಡಿಎಸ್‌ ಆಕ್ರೋಶ

ಬೆಂಗಳೂರು: ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್‌.ಡಿ. ದೇವೇಗೌಡ ಅವರಿಗೆ ರಾಜ್ಯ ಸರ್ಕಾರ ಆಮಂತ್ರಣ ನೀಡದೆ ಅವಮಾನಿಸಿದೆ ಎಂದು ಜನತಾ ದಳ (ಜೆಡಿಎಸ್‌) ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ರಾಜ್ಯ ಜೆಡಿಎಸ್‌ ಘಟಕ ಟ್ವೀಟ್‌ ಮಾಡಿದ್ದು, ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಹೆಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಆರೋಪಿಸಿದೆ.

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಎಂದು ಪ್ರಶ್ನಿಸಿದೆ.

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ ಎಂದು ಜೆಡಿಎಸ್‌ ಘಟಕ ಕಿಡಿಕಾರಿದೆ.

ರಾಜ್ಯ ಬಿಜೆಪಿ ಸರಕಾರ,ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ ಎಂದು ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ ಎಂದು ಹರಿಹಾಯ್ದಿದೆ.

ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ವಾಗ್ದಾಳಿ ನಡೆಸಿದೆ.

ಈ ಕುರಿತು ʼಪೀಪಲ್‌ ಟಿವಿʼಯೊಂದಿಗೆ ಮಾತನಾಡಿದ ಜೆಡಿಎಸ್‌ ವಕ್ತಾರರಾದ ಗಂಗಾಧರ ಮೂರ್ತಿಯವರು, ಬಿಜೆಪಿ ಸರ್ಕಾರ ಸರ್ಕಾರ ಸರ್ಕಾರದ ಅನುದಾನದಲ್ಲಿ ಮಾಡಿರುವಂತ ಕಾರ್ಯಕ್ರಮ ಇದಾಗಿದ್ದು, ಯಾವುದೇ ಪಕ್ಷದ ಕಾರ್ಯಕ್ರಮ ಅಥವಾ ಸಚಿವ ಸಿ. ಎನ್. ಅಶ್ವತ್ ನಾರಾಯಣ್ ಅವರ ಕಾರ್ಯಕ್ರಮವಲ್ಲ ಎಂದು ಕಿಡಿಕಾರಿದರು.

ಸರ್ಕಾರ 100 ಕೋಟಿ ಅನದಾನ ನೀಡಿ, ಕೆಂಪೇಗೌಡರ ಮೂರ್ತಿಯನ್ನು ಸ್ಥಾಪಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಸಬೇಕೆಂಬ ಕಾರಣಕ್ಕೆ, ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಇದಕ್ಕೂ ಮೊದಲು ದೇವೇಗೌಡರು ಪ್ರಧಾನಮಂತ್ರಿಯಾದಂತಹ ಸಂದರ್ಭದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವುದಕ್ಕೆ ಜಾಗ ಗುರುತಿಸಿ, ಅನುದಾನ ನೀಡಿದ್ದರು. ಇಲ್ಲದಿದ್ದರೆ ಈ ವಿಮಾನ ನಿಲ್ದಾಣವು ಬೆಂಗಳೂರಿಗೆ ಬರುತ್ತಿರಲಿಲ್ಲ ಎಂದರು.

ರಾಜ್ಯ ಸರ್ಕಾರವು ಈ ಕಾರ್ಯಕ್ರಮವನ್ನು ಕೇಸರಿಮಯವಾಗಿ ರೂಪಿಸಲು ಹೋಗಿ ಈ ರೀತಿಯ ಸಮಸ್ಯೆಗಳನ್ನು ಸೃಷ್ಟಿಮಾಡಿಕೊಂಡಿದೆ. ಈ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನ ನೀಡದಿರುವುದು ರಾಜ್ಯಕ್ಕಾಗಲಿ ಅಥವಾ ನಾಡಿನ ಜನತೆಗಾಗಲಿ ನಷ್ಟವಾಗಿಲ್ಲ, ಇದರಿಂದ ನಷ್ಟವಾಗಿರುವುದು ಬಿಜೆಪಿ ಸರ್ಕಾರಕ್ಕೆ ಎಂದರು.

ಅದರೆ ಇಲ್ಲಿ ನಾಡಪ್ರಭು ಎಂದೆನಿಸಿಕೊಳ್ಳುವ ಕೆಂಪೇಗೌಡರನ್ನು ಒಂದು ಜಾತಿಗೆ ಸೀಮಿತ ಮಾಡಿ ಮತ್ತು ಒಂದು ಪಕ್ಷಕ್ಕೆ ಸಿಮೀತ ಮಾಡಿರುವುವಂತದ್ದು ರಾಜ್ಯ ಬಿಜೆಪಿ ಸರ್ಕಾರದ ಹುನ್ನಾರ ಎಂದು ಆರೋಪಿಸಿದರು.

Related Articles

ಇತ್ತೀಚಿನ ಸುದ್ದಿಗಳು