ನೆರೆಪೀಡಿತ ಮತ್ತು ಮಳೆಯಿಂದಾಗಿ ಅನಾಹುತವಾದ ಪ್ರದೇಶಗಳ ಭೇಟಿಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿದೆ. ಮತ್ತು ಸಾವರ್ಕರ್ ಫೋಟೊ ತೋರಿಸಿ ಧಿಕ್ಕಾರ ಕೊಗಲಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರ ಹತ್ತಿರದ ಗುಡ್ಡೇಹೊಸೂರಿನಲ್ಲಿ ಈ ಘಟನೆ ನಡೆದಿದೆ.
ಇದರ ಬೆನ್ನಲ್ಲೇ ರಾತ್ರಿ ಸಕಲೇಶಪುರದಲ್ಲೂ ಭಜರಂಗದಳ ಕಾರ್ಯಕರ್ತರು ಸಿದ್ದರಾಮಯ್ಯನವರ ಕಾರನ್ನು ಅಡ್ಡಗಟ್ಟಿ, ಸಾವರ್ಕರ್ ಬ್ಯಾನರ್ ಹಿಡಿದು ಪ್ರತಿಭಟಿಸಿದ್ದಾರೆ. ತಾಲ್ಲೂಕಿನ ಹಾನಬಾಳ್ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಗೆ ಸಿದ್ದರಾಮಯ್ಯ ಹೊರಟಿದ್ದರು. ಮಾರ್ಗ ಮಧ್ಯೆ ಅವರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದಾರೆ.

ಇಂದು ಸಿದ್ದರಾಮಯ್ಯ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸ ಮಾಡಲಿದ್ದಾರೆ. ಜಿಲ್ಲೆಯ ಶೃಂಗೇರಿಗೆ ಇಂದು ಸಿದ್ದರಾಮಯ್ಯ ಆಗಮಿಸಲಿದ್ದು ಶೃಂಗೇರಿಯಲ್ಲೂ ಸಹ ಪ್ರತಿಭಟನೆ ಕಾವು ಪಡೆಯುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಹಲವು ಕಡೆಗಳಲ್ಲೂ ಪ್ರತಿಭಟನೆ ನಡೆಸುವುದಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಘಟನೆಯ ನಂತರ ಸಂಘಪರಿವಾರದ ಈ ಮನಸ್ಥಿತಿ ಬಗ್ಗೆ ಕರ್ನಾಟಕದಾದ್ಯಂತ ವ್ಯಾಪಕ ವಿರೋಧ ಟೀಕೆ ವ್ಯಕ್ತವಾಗಿದ್ದು ಇತರೆ ಪಕ್ಷಗಳ ಮುಖಂಡರೂ ಇದನ್ನು ಖಂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಈ ಘಟನೆ ಬಗ್ಗೆ ಮಾತನಾಡಿ, ಇಂತಹ ಕೃತ್ಯ ಸಂಘಪರಿವಾರದ ಮನಸ್ಥಿತಿಯನ್ನು ಎತ್ತಿ ಹಿಡಿಯುತ್ತಿದೆ. ಇಂತಹ ಘಟನೆ ಮರುಕಳಿಸದಂತೆ ನೋಡುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಘಟನೆಯ ಬಗ್ಗೆ ಮಾತನಾಡಿ ಈ ರೀತಿಯ ಘಟನೆ ನಡೆಯಬಾರದಿತ್ತು. ಇದು ತಪ್ಪು ಎಂದು ಪ್ರತಿಕ್ರಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿ ಪ್ರಜಾಪ್ರಭುತ್ವದಲ್ಲಿ ಸಿದ್ಧರಾಮಯ್ಯ ತಮ್ಮ ವಿಚಾರ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅಶಾಂತಿ ಮೂಡಿಸುವ ಕೆಲಸ ಸರಿ ಅಲ್ಲ. ಇದು ಸಿದ್ದರಾಮಯ್ಯಗೆ ಅವಮಾನ ಅಲ್ಲ, ರಾಜ್ಯಕ್ಕೆ ಆದ ಅವಮಾನ. ಅವಮಾನದ ಜವಬ್ದಾರಿಯನ್ನು ಸಿಎಂ ಹೊತ್ತುಕೊಳ್ಳಬೇಕು ಎಂದಿದ್ದಾರೆ.
ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಯಿಸಿದ್ದು ಮಾನ್ಯ ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿದ್ದು, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು ಎಂದಿದ್ದಾರೆ.
ಸಂಘಪರಿವಾರದ ಕಾರ್ಯಕರ್ತರ ಸಾಮಾಜಿಕ ಜಾಲತಾಣಗಳ ಪ್ರತಿಕ್ರಿಯೆ ನೋಡಿದರೆ ಇಂದೂ ಸಹ ಪ್ರತಿಭಟನೆ ನಡೆಯುವ ಮುನ್ಸೂಚನೆ ಇದ್ದು ಸ್ಥಳೀಯ ಆಡಳಿತ, ಪೊಲೀಸ್ ವ್ಯವಸ್ಥೆ ಇದನ್ನು ಹೇಗೆ ನಿಭಾಯಿಸಲಿದೆ ಎಂಬುದನ್ನು ಕಾದು ನೋಡಬೇಕು.