Saturday, June 21, 2025

ಸತ್ಯ | ನ್ಯಾಯ |ಧರ್ಮ

ರಾಹುಲ್‌ ಗಾಂದಿಯವರನ್ನು ಬೆಂಬಲಿಸಿ ಕೆಪಿಸಿಸಿ ಮೌನ ಪ್ರತಿಭಟನೆ; ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗಿ

ಬೆಂಗಳೂರು,ಜುಲೈ 12: ಮೋದಿ ಉಪನಾಮ ಕೇಸಿನ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹತೆ ಮಾಡಿರುವ ಕ್ರಮವನ್ನು ಖಂಡಿಸಿ ಇಡೀ ದಿನ ಕಾಂಗ್ರೆಸ್ ದೇಶಾದ್ಯಂತ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನವಾಗಿ ಪ್ರತಿಭಟನೆ ನಡೆಸಿದ್ದಾರೆ.

ʼಸತ್ಯದ ಘರ್ಜನೆ ಮೊಳಗಲಿ ಎನ್ನುವ ಘೋಷಣೆʼ ಇರುವ ಫಲಕವನ್ನು ಹಿಡಿದು ಧರಣಿಯಲ್ಲಿ ಕುಳಿತ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮುಂತಾದವರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಈ ಕುರಿತು ಪ್ರತಿಭಟನೆಗಳು ನಡೆಯುತ್ತಿದ್ದು ಪ್ರತಿಭಟನೆಯಲ್ಲಿ ಸ್ಥಳೀಯ ನಾಯಕರು ಪಾಲ್ಗೊಳ್ಳುತ್ತಿದ್ದಾರೆ

ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆಯ ಚಿತ್ರ

ಬೆಂಗಳೂರಿನಲ್ಲಿ ಪ್ರತಿಭಟನೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಹಿಸಿದ್ದು, ರಾಹುಲ್ ಗಾಂಧಿಯವರ ರಾಜಕೀಯ ಜೀವನ ಮುಗಿಸಲು ಷಡ್ಯಂತ್ರ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಇಂದು ಬೆಳಗಿನಿಂದ ಸಂಜೆಯವರೆಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಪ್ರತಿಭಟನೆ ಬಳಿಕ ಮಾಧ್ಯಮಗಳೊಡನೆ ಮಾತನಾಡಿದ ಡಿಸಿಎಂ, ಡಿ.ಕೆ. ಶಿವಕುಮಾರ್, ಲೋಕಸಭೆ ಚುನಾವಣೆಯಲ್ಲಿ 7 ಲಕ್ಷ ಮತಗಳ ಅಂತರದಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅವರ ಅನರ್ಹತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರಾಳ ಅಧ್ಯಾಯ. ನಮ್ಮ ರಾಜ್ಯದಲ್ಲಿ ಮಾಡಿದ ಭಾಷಣ ಇಟ್ಟುಕೊಂಡು ಬಿಜೆಪಿ ಕುತಂತ್ರ ಮಾಡಿದೆ. ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಿರೀಕ್ಷೆಯಿತ್ತು. ತೀರ್ಪಿನ ವಿಚಾರವಾಗಿ ನಾವು ಮಾತನಾಡುವುದಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಧಾನಿ ಆಗಬಹುದಿತ್ತು. ಆದರೆ, ದೇಶಕ್ಕೆ ಆರ್ಥಿಕ ತಜ್ಞ ಅಗತ್ಯವಿದೆ ಎಂದು ಅಧಿಕಾರ ತ್ಯಾಗ ಮಾಡಿದರು. ರಾಹುಲ್‌ ಗಾಂಧಿ ಭಾರತ ಜೋಡೋ ಯಾತ್ರೆ ಮೂಲಕ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಧ್ವನಿ ಎತ್ತಿ ಭಾರತ ಒಂದುಗೂಡಿಸಲು ಪ್ರಯತ್ನಿಸಿದರು. ಅದರಿಂದ ಅವರಿಗೆ ಸಿಕ್ಕ ಜನಬೆಂಬಲ ಸಹಿಸದೆ ಬಿಜೆಪಿ ಅವರ ಸದಸ್ಯತ್ವ ಅನರ್ಹಗೊಳಿಸಲಾಗಿದೆಯೆಂದು ಅವರು ಆರೋಪಿಸಿದರು.

ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಂತ್ರಿಗಳಾದ ಕೆ.ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಬೋಸರಾಜ್, ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿ ರಾಹು‌ಲ್‌ ಗಾಂದಿಯವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page