ಚಿತ್ರದುರ್ಗ: ಚಿತ್ರದುರ್ಗದಲ್ಲಿ ಇಂದು ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ ಸಿಎಂ ಬೊಮ್ಮಾಯಿ ಜಿಲ್ಲೆಯಲ್ಲಿ 1000 ಎಕರೆ ಪ್ರದೇಶದ ಕೈಗಾರಿಕಾ ಟೌನ್ ಶಿಪ್ ನಿರ್ಮಾಣದ ಬಗ್ಗೆ ಮಾತನಾಡಿದ್ದಾರೆ.
ʼಮುಂಬೈ ಚೆನ್ನೈ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ ಮಾಡುವ ಮೂಲಕ ಕೈಗಾರಿಕಾ ಕ್ರಾಂತಿ ತರಲಾಗುವುದುʼ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸರ್ಕಾರಿ ವಿವಿಧ ಸೌಲಭ್ಯ ವಿತರಣೆ, 100 ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ ಮತ್ತು 94-ಸಿಸಿ, 94-ಸಿ ಹಾಗೂ ಬಗರ್ ಹುಕಂ ಸಾಗುವಳಿ ಚೀಟಿ ವಿತರಣೆ ಹಾಗೂ ಅಮೃತ ಗ್ರಾಮ ಪಂಚಾಯಿತಿಗಳ ಜನವಸತಿಗಳ ಮನೆ-ಮನೆಗೆ ನಳಸಂಪರ್ಕ ಕಲ್ಪಿಸುವ ಕಾಮಗಾರಿಗಳ ಶಂಕುಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಕುಡಿಯುವ ನೀರು ಯೋಜನೆಗೆ 593 ಕೋಟಿ ರೂ.ಗಳಿಗೆ ಮಂಜೂರಾತಿ ಬಗ್ಗೆ ಮಾತನಾಡಿ, ʼಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ ದೊರೆತು ಸುಮಾರು 13 ಸಾವಿರ ಕೋಟಿ ಕೇಂದ್ರ ಸರ್ಕಾರದ ಅನುದಾನದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು. ಚಿತ್ರದುರ್ಗ ಮೂಲಕ ತುಮಕೂರು- ದಾವಣಗೆರೆ ರೈಲು ಸಂಪರ್ಕ ಯೋಜನೆಗೆ 100 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ, ಚಿತ್ರದುರ್ಗ ಜಿಲ್ಲೆ ಜಲಜೀವನ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 593 ಕೋಟಿ ರೂ.ಗಳನ್ನು ಸಚಿವಸಂಪುಟದಲ್ಲಿ ಮಂಜೂರಾತಿ ನೀಡಲಾಗಿದೆʼ ಎಂದರು.