ಮಂಡ್ಯ, ಮಾರ್ಚ್ 30: ಕರ್ನಾಟಕದ ಕಾಂಗ್ರೆಸ್ ಶಾಸಕ ರಮೇಶ್ ಶನಿವಾರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು ಲೇವಡಿ ಮಾಡಿದ್ದಾರೆ. ಚುನಾವಣೆಗೂ ಮುನ್ನ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ಅವರು ಸಭೆಯೊಂದರಲ್ಲಿ ಕುಮಾರಸ್ವಾಮಿಯವರ ಕಾಲೆಳೆದಿದ್ದಾರೆ.
ಮಳವಳ್ಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ, ”ಚುನಾವಣೆ ಹತ್ತಿರ ಬಂದಾಗಲೆಲ್ಲಾ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯ ನೆಪದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಾರೆ” ಎಂದು ಹೇಳಿದರು
‘ಈ ಬಾರಿ ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮೂರು ದಿನ ಆಸ್ಪತ್ರೆಯಲ್ಲಿದ್ದರು, ಇದಾದ ನಂತರ ಮರುದಿನವೇ ಪ್ರವಾಸಕ್ಕೆ ತೆರಳಿದರು. ಇದು ಹೇಗೆ ಸಾಧ್ಯ?’ ಎಂದು ಶಾಸಕ ರಮೇಶ್ ಪ್ರಶ್ನಿಸಿದರು.
”ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರಿಗೂ ಕುಮಾರಸ್ವಾಮಿಯಂತೆ ಹೃದಯ ಸಂಬಂಧಿ ಕಾಯಿಲೆ ಇದೆ. ಆದರೆ, ಚೆಲುವರಾಯಸ್ವಾಮಿ ಕಾಯಿಲೆಗೆ ಚಿಕಿತ್ಸೆ ಪಡೆದಾಗ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿರಬೇಕಾಗುತ್ತದೆ.
ಅಷ್ಟಕ್ಕೂ ಎರಡು-ಮೂರು ದಿನದೊಳಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಡಿಸ್ಚಾರ್ಜ್ ಆಗುವುದು ಸಾಧ್ಯವಾದರೆ ಅದರ ಬಗ್ಗೆ ತಿಳಿದುಕೊಳ್ಳಬೇಕು ಎಂದು ರಮೇಶ್ ಮತ್ತಷ್ಟು ವ್ಯಂಗ್ಯವಾಡಿದರು.
ಸಮಸ್ಯೆಗಳನ್ನು ಸೃಷ್ಟಿಸುವ ಜನರ ಮಾತಿಗೆ ಕಿವಿಗೊಡಬೇಡಿ, ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗಮನಾರ್ಹ ಅಂತರದಿಂದ ಗೆಲ್ಲಿಸಿ ಎಂದು ಅವರು ಮನವಿ ಮಾಡಿದರು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾರ್ಚ್ 21ರಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದು ಅವರ ಮೂರನೇ ಶಸ್ತ್ರಚಿಕಿತ್ಸೆಯಾಗಿತ್ತು.