Sunday, August 17, 2025

ಸತ್ಯ | ನ್ಯಾಯ |ಧರ್ಮ

ಸಕಲೇಶಪುರ ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ತೆರವು ಕಾರ್ಯಾಚರಣೆ ಪ್ರಾರಂಭ

ಸಕಲೇಶಪುರ : ಸಕಲೇಶಪುರ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (NH-75) ಶಿರಾಡಿ ಘಾಟ್‌ನ ದೊಡ್ಡತಪ್ಪಲೆ ಬಳಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಕಾರೊಂದರ ಮೇಲೆ ಬಿದ್ದ ಘಟನೆ ನಡೆದಿದೆ. ಈ ಘಟನೆಯಿಂದ ಕಾರು ಜಖಂಗೊಂಡಿದ್ದು, ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತು.

ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ತಂಡ, ಉಪ ವಿಭಾಗಾಧಿಕಾರಿಗಳು, ಸಕಲೇಶಪುರ ವಲಯ ಅರಣ್ಯಾಧಿಕಾರಿಗಳಾದ ಹೇಮಂತ್ ಕುಮಾರ್, ಮಾರನಹಳ್ಳಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಮಹದೇವ್, ಕೆಂಪುಹೊಳೆ ಬೀಟ್‌ನ ಅರಣ್ಯ ವೀಕ್ಷಕ ಲೋಕೇಶ್ ಮತ್ತು ಅವರ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಗುಡ್ಡ ಕುಸಿತದಿಂದಾಗಿ ರಸ್ತೆಯಲ್ಲಿ ವಾಹನಗಳು ಗಂಟೆಗಟ್ಟಲೆ ಸರತಿಯಲ್ಲಿ ಸಿಲುಕಿಕೊಂಡಿವೆ. ಈ ಘಟನೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ತಂಡಗಳು ಮಣ್ಣು ತೆರವುಗೊಳಿಸಲು ಶ್ರಮಿಸುತ್ತಿದ್ದು, ರಸ್ತೆಯನ್ನು ಶೀಘ್ರವಾಗಿ ಮುಕ್ತಗೊಳಿಸುವ ಪ್ರಯತ್ನದಲ್ಲಿವೆ.

ಶಿರಾಡಿ ಘಾಟ್‌ನಲ್ಲಿ ಭಾರೀ ಮಳೆಯಿಂದಾಗಿ ಆಗಾಗ್ಗೆ ಭೂಕುಸಿತ ಸಂಭವಿಸುವುದು ಸಾಮಾನ್ಯವಾಗಿದ್ದು, ಈ ಘಟನೆಯಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ಸ್ಥಳೀಯರು ಮತ್ತು ಪ್ರಯಾಣಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

ಗಮನಿಸಿ: ಪ್ರಯಾಣಿಕರು ಶಿರಾಡಿ ಘಾಟ್ ಮಾರ್ಗವನ್ನು ತಪ್ಪಿಸಿ ಪರ್ಯಾಯ ಮಾರ್ಗಗಳಾದ ಚಾರ್ಮಡಿ ಘಾಟ್ ಅಥವಾ ಸಂಪಾಜೆ ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page