ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದಲ್ಲಿ ಇಂದು ಪ್ರಾಥಮಿಕ ತನಿಖೆ ಶುರುವಾಗಿದೆ.
ವರ್ಮಾ ಅವರ ಮನೆಗೆ ಬಿದ್ದ ಬೆಂಕಿಯನ್ನು ನಂದಿಸಲು ತೆರಳಿದ್ದ ಅಗ್ನಿ ಶಾಮಕ ದಳದ ಸಿಬ್ಬಂದಿ ಭಾರಿ ಪ್ರಮಾಣದ ನಗದು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿತ್ತು. ಹಣ ಪತ್ತೆಯಾಗಿದೆ ಎನ್ನಲಾದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಹಲವರು ನ್ಯಾಯಮೂರ್ತಿಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಈ ವಿಷಯ ಚರ್ಚಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆ ಸೇರಿದೆ ಎಂಬುದನ್ನು ಪ್ರಕಟಣೆ ಖಚಿತ ಪಡಿಸಿದ್ದು, ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ ಉಪಾಧ್ಯಾಯ ಅವರು ಈ ಸಂಬಂಧ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ವರದಿ ಸಲ್ಲಿಸಲಿದ್ದಾರೆ ಎಂದು ಹೇಳಿದೆ.
‘ಉಪಾಧ್ಯಾಯ ಅವರು ಸಾಕ್ಷ್ಯ ಮತ್ತು ಮಾಹಿತಿ ಯನ್ನು ಸಂಗ್ರಹಿಸುವ ಆಂತರಿಕ ತನಿಖಾ ಪ್ರಕ್ರಿಯೆಪ್ರಾರಂಭಿಸಿದ್ದಾರೆ. ಅವರು ನೀಡುವ ವರದಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ. ಮಾರ್ಚ್ 20ರಂದು ಕೊಲಿಜಿಯಂ ಸಭೆ ಸೇರುವ ಮುನ್ನವೇ ಅವರು ತನಿಖೆ ಆರಂಭಿಸಿದ್ದರು ಎಂದು ಹೇಳಲಾಗಿದೆ.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಸಂಜೆ ಸಭೆ ಸೇರಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಲು ನಿರ್ಧರಿಸಿತ್ತು.
ಪ್ರಕರಣ ಕುರಿತಂತೆ ಸಿಜೆಐ ವಿವರಣೆ ನಂತರ ಕೊಲಿಜಿಯಂ ಸದಸ್ಯರು ನ್ಯಾಯಮೂರ್ತಿ ವರ್ಮಾ ಅವರನ್ನು ವರ್ಗಾಯಿಸಲು ನಿರ್ಧರಿಸಿದರು.
ಕೊಲಿಜಿಯಂನ ಶಿಫಾರಸನ್ನು ಕೇಂದ್ರ ಸರ್ಕಾರ ಅಂಗೀಕರಿಸಿದ ನಂತರ ನ್ಯಾಯಮೂರ್ತಿ ವರ್ಮಾ ಅವರ ಪ್ರಸ್ತಾವಿತ ವರ್ಗಾವಣೆ ಜಾರಿಗೆ ಬರಬಹುದು.