ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಧರ್ಮಸ್ಥಳ ಪ್ರಕರಣದ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿತು.
ಹಲವು ದಿನಗಳಿಂದ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಸಾವಿನ ಪ್ರಕರಣ ಕಗ್ಗಂಟಾಗಿ ಉಳಿದಿದೆ. ದಿನದಿಂದ ದಿನಕ್ಕೆ ಹಲವು ತಿರುವುಗಳನ್ನು ಪಡೆಯುತ್ತಾ ಮುಂದುವರಿದಿರುವ ಈ ಪ್ರಕರಣದಲ್ಲಿ ಸರ್ಕಾರ ಮಧ್ಯಪ್ರವೇಶಿಸಿದರೆ ಸಾಕ್ಷ್ಯಾನಾಶ ಅಥವಾ ಸಾಕ್ಷಿಯ ಮೇಲೆ ಪ್ರಾಣಭಯದಂತಹ ಸಾಧ್ಯತೆಗಳನ್ನು ತಪ್ಪಿಸಬಹುದು ಎಂಬ ಮಾತುಗಳು ಕೇಳಿ ಬಂದಿವೆ.
ಎರಡು ದಿನಗಳ ಹಿಂದಷ್ಟೇ ರಾಜ್ಯ ಮಹಿಳಾ ಆಯೋಗ ಕೂಡ ಸರ್ಕಾರಕ್ಕೆ ಮನವಿ ಮಾಡಿದ್ದು, ಧರ್ಮಸ್ಥಳ ಗ್ರಾಮದಲ್ಲಿ ಆದ ಹಲವು ಸಾವಿನ ಪ್ರಕರಣದಲ್ಲಿ ಎಸ್ಐಟಿ ರಚನೆ ಮಾಡಲು ಮನವಿ ಮಾಡಿತ್ತು. ಅದರ ಬೆನ್ನಲ್ಲೇ ವಕೀಲರ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕ್ರಮ ಕೈಗೊಳ್ಳಲು ಮನವಿ ಮಾಡಿದೆ.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಕೀಲರ ನಿಯೋಗದ ನೇತೃತ್ವ ವಹಿಸಿದ್ದ ಸಿಎಸ್ ದ್ವಾರಕಾನಾಥ್ ಅವರು, ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಸಿ.ಎಸ್. ದ್ವಾರಕಾನಾಥ್ ಅವರು, “ಇವತ್ತು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ, ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದಂತಹ ಸಾಮೂಹಿಕ ಅತ್ಯಾಚಾರ, ಹತ್ಯೆ ಮತ್ತು ಹೂತು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದೇವೆ. ಈಗಾಗಲೇ ಅಲ್ಲಿ ತನಿಖೆ ನಡೆಯುತ್ತಿದ್ದು, ಒಬ್ಬರು ದೂರು ಕೂಡ ನೀಡಿದ್ದಾರೆ. ಆ ವ್ಯಕ್ತಿಗೆ ಸೂಕ್ತ ರಕ್ಷಣೆ ನೀಡಬೇಕಾಗಿದೆ. ಅಲ್ಲದೆ, ಆ ವ್ಯಕ್ತಿ ಹೇಳುವ ಜಾಗದಲ್ಲಿ ಪರಿಶೀಲನೆ ನಡೆಸಬೇಕಾಗುತ್ತದೆ. ಹೀಗಾಗಿ ಈ ಪ್ರಕರಣವನ್ನು ಎಸ್ಐಟಿಗೆ ನೀಡಬೇಕು ಎಂದು ಮನವಿ ಮಾಡಿದ್ದೇವೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.