ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಹಾಗೂ ಫೇಸ್ಬುಕ್ ಖಾತೆಗಳ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಪಕ್ಷದ ಚಳಿ ಬಿಡಿಸುವುದನ್ನು ನೋಡಿದ್ದೇವೆ. ಆದರೆ ಅಪರೂಪದಲ್ಲಿ ಅಪರೂಪ ಎಂಬಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.
ಕರ್ನಾಟಕದ 15 ವರ್ಷದ ಮಗುವಿನ ಚಿಕಿತ್ಸೆಗಾಗಿ ಔಷಧಕ್ಕೆ ಸಂಬಂಧಿಸಿದಂತೆ ಆಮದು ಸುಂಕ ವಿನಾಯಿತಿ ನೀಡುವಂತೆ ಸಿದ್ದರಾಮಯ್ಯ ಅವರು ಪ್ರಧಾನಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ. ವೈದ್ಯಕೀಯ ನೆರವಿಗೆ ಮನವಿ ಮಾಡಿಕೊಂಡದ್ದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಬಹು ಚರ್ಚಿತ ವಿಚಾರವಾಗಿದೆ.
ಮೌರ್ಯ ಎಂಬ ಪುಟ್ಟ ಬಾಲಕ ತೀರಾ ಅಪರೂಪದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಕಾಯಿಲೆ ಎಂದು ಬಳಲುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಮಗುವಿನ ಗುಣಪಡಿಸಲು ಮಗುವಿನ ಪೋಷಕರು 60 ಲಕ್ಷ ಖರ್ಚು ಮಾಡಿದ್ದಾರೆ. ಈ ಖಾಯಿಲೆ ಗುಣಪಡಿಸಲು ಇರುವ ಔಷಧಿಯನ್ನು 2 ವರ್ಷದ ಒಳಗೆ ಮಗುವಿಗೆ ಕೊಡಿಸಬೇಕು ಎಂದು ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ. ಸಧ್ಯ ಮಗುವಿಗೆ 15 ತಿಂಗಳಾಗಿದೆ.
ಈ ಮಗುವಿನ ಖಾಯಿಲೆ ಗುಣಪಡಿಸಬಹುದಾದ ಝೋಲ್ಗೆನ್ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಈ ವಿಚಾರವಾಗಿ ಮಗುವಿನ ಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚುಚ್ಚುಮದ್ದನ್ನು ಆಮದು ಮಾಡಿಕೊಳ್ಳಲು ಸಹಾಯ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು, ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂಬುದಾಗಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.
ಈ ಒಂದು ಪತ್ರ ಹಾಗೂ ಸಿದ್ದರಾಮಯ್ಯನವರ ಟ್ವಿಟ್ ಈಗ ಎಲ್ಲೆಡೆ ವೈರಲ್ ಆಗಿದೆ. ರಾಜಕೀಯ ಎದುರಾಳಿಯೇ ಆದರೂ ಒಂದು ಮಗುವಿನ ಜೀವ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಸಿದ್ದರಾಮಯ್ಯರ ಮನವಿಗೆ ಸ್ಪಂದಿಸುವ ದೊಡ್ಡ ಮನಸ್ಸು ಮಾಡುವರೇ ಎಂಬುದನ್ನು ಕಾದು ನೋಡಬೇಕಿದೆ.