ತುಮಕೂರು: ಬಿಜೆಪಿ ಮುಖಂಡ ಸುರೇಶ್ ಗೌಡ ಅವರ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ತುಮಕೂರು ಗ್ರಾಮಾಂತರದ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಗುರುವಾರ ಪೊಲೀಸರು ಹಲವಾರು ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಈ ಕುರಿತು ಸುರೇಶ್ ಗೌಡರವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮೂವರು ವ್ಯಕ್ತಿಗಳು ತನ್ನನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ದೂರಿನಲ್ಲಿ ʼನನ್ನ ಜೀವಕ್ಕೆ ಅಪಾಯವಿದೆ ಮತ್ತು ತನ್ನ ಜೀವ ಕಾಪಾಡಿಕೊಳ್ಳುವ ಉದ್ದೇಶದಿಂದ ಈಗಾಗಲೇ 5 ಕೋಟಿ ರೂ.ಗಳನ್ನು ನೀಡಲಾಗಿದೆʼ.ʼನಾನು ಕಾರಿನಲ್ಲಿ ಸಂಚಾರಿಸುವಾಗ ಸಂಚಾರಕ್ಕೆ ಅಡ್ಡಿಪಡಿಸುವುದು ಅಥವಾ ಬೇರೆ ವಾಹನದಿಂದ ಅಪಘಾತಗೊಳಿಸಿ. ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾರೆʼ ಎಂದು ಸುರೇಶ್ ಗೌಡರವರು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿನ್ನಲೆಯಲ್ಲಿ ಶಾಸಕ ಗೌರಿಶಂಕರ್ ಮತ್ತು ಅವರ ಬೆಂಬಲಿಗರಾದ ಹಿರೇಹಳ್ಳಿ ಮಹೇಶ್ ಮತ್ತು ಬೊಮ್ಮನಹಳ್ಳಿ ಬಾಬು ಅಲಿಯಾಸ್ ಅಟ್ಟಿಕಾ ಬಾಬು ಮತ್ತು ಕೆಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿಯ ಶಿಕ್ಷೆ), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಹಾಗೂ ಸೆಕ್ಷನ್109 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ತುಮಕೂರಿನ ಪ್ರಥಮ ದರ್ಜೆ ನ್ಯಾಯಾಧೀಶರ (ಜೆಎಂಎಫ್ ಸಿ) ನ್ಯಾಯಾಲಯದ ಅನುಮತಿ ಮೇರೆಗೆ ಮಾಜಿ ಶಾಸಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.