Saturday, June 15, 2024

ಸತ್ಯ | ನ್ಯಾಯ |ಧರ್ಮ

ಪ್ರಹ್ಲಾದ್ ಜೋಷಿ ವಿರುದ್ಧ ಸಿಡಿದೆದ್ದ ಲಿಂಗಾಯತ ಮಠಾಧೀಶರು ; ಟಿಕೆಟ್ ಬದಲಿಸಲು ಬಿಜೆಪಿಗೆ ಗಡುವು

ರಾಜಕೀಯವನ್ನು ತಿಳಿದು ಮಾಡಬೇಕೇ ಹೊರತು ತುಳಿದು ಮಾಡಬಾರದು. ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಇತರೆ ಸಮುದಾಯಗಳನ್ನು ತುಳಿದು ರಾಜಕೀಯ ಮಾಡುತ್ತಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್‌ನ್ನು ಬಿಜೆಪಿ ವರಿಷ್ಠರು ಮಾ. 31ರೊಳಗೆ ಬದಲಾಯಿಸಬೇಕು. ಇಲ್ಲದಿದ್ದಲ್ಲಿ ಏ. 2ರಂದು ನಮ್ಮ ನಿರ್ಧಾರ ಪ್ರಕಟಿಸಬೇಕಾಗುತ್ತದೆ ಎಂದು ರಾಜ್ಯದ 40 ಮಠಾಧೀಶರ ಸಮೂಹ ಬಿಜೆಪಿ ವರಿಷ್ಠರಿಗೆ ಸಂದೇಶ ರವಾನಿಸಿದ್ದಾರೆ.

ಮೂರುಸಾವಿರಮಠದ ಆವರಣದಲ್ಲಿ ವಿವಿಧ ಮಠಾಧೀಶರೊಂದಿಗೆ ಚಿಂತನ ಮಂಥನ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದರು. ಚಿಂತನ ಮಂಥನ ಸಭೆಯಲ್ಲಿ ಬರೋಬ್ಬರಿ ವಿವಿಧ ಜಿಲ್ಲೆಗಳ 40ಕ್ಕೂ ಹೆಚ್ಚು ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.

ಜೋಶಿ ಅವರಿಗೆ ಅಧಿಕಾರ ಮತ್ತು ಸಂಪತ್ತಿನ ಮದವೇರಿದೆ, ಲಿಂಗಾಯತ, ಕುರುಬ ಸೇರಿದಂತೆ ಎಲ್ಲ ಸಮುದಾಯವನ್ನು ತುಳಿದಿದ್ದಾರೆ. ಸ್ವಾಮೀಜಿಗಳನ್ನು ಅವಮಾನಿಸಿದ್ದಾರೆ. ನಮ್ಮ ವಿರೋಧ ಅವರ ವ್ಯಕ್ತಿತ್ವಕ್ಕೆ ಹೊರತು ಪಕ್ಷ ಅಥವಾ ಸಮಾಜಕ್ಕೆ ಅಲ್ಲ. ಶ್ರೀಮಠದಲ್ಲಿ ನಡೆದ ಚಿಂಥನ ಮಂತನ ಸಭೆಯಲ್ಲಿ ಮಠಾಧಿಪತಿಗಳು ಸೇರಿ ಈ ನಿರ್ಣಯ ಕೈಗೊಳ್ಳಲಾಗಿದೆ. ಬಿಜೆಪಿ ಹೈಕಮಾಂಡ್‌ ಪ್ರಹ್ಲಾದ ಜೋಶಿ ಅವರನ್ನು ಮಾ. 31ರೊಳಗೆ ಬದಲಿಸಿ ಬೇರೊಬ್ಬರಿಗೆ ಟಿಕೆಟ್‌ ಘೋಷಿಸಬೇಕು. ಇಲ್ಲದಿದ್ದಲ್ಲಿ ಏ. 2ರಂದು ಮತ್ತೊಮ್ಮೆ ಲಿಂಗಾಯತ ಸ್ವಾಮೀಜಿಗಳ ಸಭೆ ಕರೆದು ನಮ್ಮ ಮುಂದಿನ ನಡೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಸ್ಥಳೀಯರೇ ಆದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಈ ಬಾರಿ ಹುಬ್ಬಳ್ಳಿ ಧಾರವಾಡ ಲೋಕಸಭಾ ಟಿಕೆಟ್ ಗೆ ಲಿಂಗಾಯತ ಮಠಾಧೀಶರು ಪ್ರಯತ್ನಿಸಿದ್ದರು. ಆದರೆ ಅವರಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲೂ ಅಸಮಾಧಾನ ಹೊರ ಹಾಕಿದ ಮಠಾಧೀಶರು ‘ಮಾಜಿ ಮುಖ್ಯಮಂತ್ರಿಗಳಿಗೆ ಬೇರೆ ಕ್ಷೇತ್ರ ನೀಡಿದಂತೆ, ಕಳೆದ 4 ಚುನಾವಣೆಯಲ್ಲಿ ಲಿಂಗಾಯತರೆಲ್ಲರೂ ಜೋಶಿ ಅವರ ಬೆನ್ನಿಗೆ ನಿಂತು ಗೆಲ್ಲಿಸಿ ಕೇಂದ್ರ ಸಚಿವರನ್ನಾಗಿ ಮಾಡಿದ್ದಾರೆ. ಆ ಉಪಕಾರಕ್ಕೆ ಜೋಶಿ ಈ ಬಾರಿ ಕ್ಷೇತ್ರ ತ್ಯಾಗ ಮಾಡಲಿ. ಲಿಂಗಾಯತ ಕ್ಷೇತ್ರದಲ್ಲಿ ಬ್ರಾಹ್ಮಣರು ಅನಿವಾರ್ಯವೇ?. ಆದರೆ ಬ್ರಾಹ್ಮಣರ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಲಿಂಗಾಯತರನ್ನು ಚುನಾವಣೆಯಲ್ಲಿ ನಿಲ್ಲಿಸಿ ಆರಿಸಿ ತರಲಿ ಎಂದು ಸವಾಲು ಹಾಕಿದರು.

ಮಾಜಿ ಮುಖ್ಯಮಂತ್ರಿಯೊಬ್ಬರು ಮರಳಿ ಪಕ್ಷಕ್ಕೆ ಹೋದಾಗ ಶುಭಾಶಯ ಹೇಳಲು ಮನಸ್ಸಿದ್ದರೂ ಹಿಂಬಾಲಕರು ಇವರ ಭಯಕ್ಕೆ ಯಾರೂ ಹೋಗುತ್ತಿಲ್ಲ. ಐಟಿ, ಇಡಿ ಸಂಸ್ಥೆಗಳ ಮೇಲೆ ಇನ್ನಿಲ್ಲದ ಪ್ರಭಾವ ಬೀರಿ ಎಲ್ಲೆಡೆ ಭಯ ಸೃಷ್ಟಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಮೂಲಕ ಪಕ್ಷದ ಒಳಗೂ ಸಹ ನಾಯಕರಲ್ಲಿ ಅಷ್ಟೊಂದು ಭಯ ಸೃಷ್ಟಿಸಿದ್ದಾರೆ. ಇದು ಪಕ್ಷ ಸಂಘಟಿಸುವ ಮಾರ್ಗ ಅಲ್ಲ ಎಂದು ಪ್ರಹ್ಲಾದ್ ಜೋಶಿ ವಿರುದ್ಧ ಮಠಾಧೀಶರು ಕಿಡಿಕಾರಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು