Saturday, June 21, 2025

ಸತ್ಯ | ನ್ಯಾಯ |ಧರ್ಮ

ಅಕ್ರಮ ಆಸ್ತಿ ಗಳಿಕೆ ಆರೋಪ: ಕರ್ನಾಟಕದಾದ್ಯಂತ 17 ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಹಲವು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ವರದಿಯೊಂದರ ಪ್ರಕಾರ 250 ಅಧಿಕಾರಿಗಳನ್ನು ಒಳಗೊಂಡ ಲೋಕಾಯುಕ್ತ ತಂಡವು ರಾಜ್ಯದ 75ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ 17 ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ.

ಬೆಂಗಳೂರು, ಹಾಸನ, ಚಿತ್ರದುರ್ಗ, ಕಲಬುರಗಿ, ಚಾಮರಾಜನಗರ, ರಾಮನಗರ ಮತ್ತು ಬೆಳಗಾವಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಳಿ ನಡೆಸಲಾಗುತ್ತಿದೆ.

ಬೆಂಗಳೂರಿನ ಉಳ್ಳಾಲದಲ್ಲಿರುವ ಕಾರ್ಖಾನೆಗಳು, ಬಾಯ್ಲರ್‌ಗಳು ಮತ್ತು ಕೈಗಾರಿಕಾ ಸುರಕ್ಷತಾ ವಿಭಾಗದ ಉಪ ನಿರ್ದೇಶಕ ಶ್ರೀನಿವಾಸ್ ಅವರ ಮನೆಯಲ್ಲೂ ಶೋಧ ನಡೆಯುತ್ತಿದೆ. ಅವರ ಕೊಳ್ಳೇಗಾಲದಲ್ಲಿರುವ ತೋಟದ ಮನೆಯಲ್ಲಿಯೂ ಶೋಧ ನಡೆಯುತ್ತಿದೆ. ಶ್ರೀನಿವಾಸ್ ಅವರೊಬ್ಬರಿಗೆ ಸಂಬಂಧಿಸಿದ 17 ಸ್ಥಳಗಳಲ್ಲಿ ಅಕ್ರಮ ಆಸ್ತಿ ಹೊಂದಿರುವ ಶಂಕೆಯ ಮೇಲೆ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.

ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ಚಂದ್ರಪ್ಪ 10 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಅದೇ ದಿನ ಲೋಕಾಯುಕ್ತ ಅಧಿಕಾರಿಗಳು ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಬೆಂಗಳೂರಿನ ಕೆಆರ್ ಪುರಂನಲ್ಲಿರುವ 3 ಅಂತಸ್ತಿನ ಕಟ್ಟಡ ಸೇರಿದಂತೆ ಹಲವು ದಾಖಲೆಗಳನ್ನು ಪತ್ತೆ ಮಾಡಿದ್ದರು.

ಸ್ಲಂ ಬೋರ್ಡ್ ಮುಖ್ಯ ಇಂಜಿನಿಯರ್ ಬಾಲರಾಜ್, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಶಶಿಕುಮಾರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್ ಹೆಚ್.ಇ ನಾರಾಯಣ್ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಸಂಪತ್ತಿನ ಮೇಲೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ಎಂಜಿನಿಯರ್‌ ಮನೆ ಮೇಲೆ ದಾಳಿ

ಬೆಳಗಾವಿ ಜಿಲ್ಲೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಎಸ್.ಬಿರಾದಾರ್ ಮತ್ತು ನಗರ ಯೋಜನಾಧಿಕಾರಿ ಅಪ್ಪಾಸಾಹೇಬ ಕಾಂಬಳೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಪತ್ತೆ ಮಾಡಲು ಅಧಿಕಾರಿಗಳು ದಾಖಲೆಗಳು ಮತ್ತು ಚಿನ್ನಾಭರಣಗಳನ್ನು ಪರಿಶೀಲಿಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ಕುರಿತು ಅಧಿಕೃತ ಹೇಳಿಕೆ ನೀಡಬೇಕಿದೆ.

ಹಾಸನದಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ

ಹಾಸನದಲ್ಲಿ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಹೆಚ್ ಇ.ನಾರಾಯಣ ಎಂಬುವವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿಯಾಗಿದ್ದು, ದಾಖಲೆ ಪರಿಶೀನಲೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page