ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೀಘ್ರದಲ್ಲೇ ವಿಚಾರಣೆಗೆ ಹಾಜರಾಗಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಈಶ್ವರಪ್ಪ ಸೇರಿದಂತೆ ಮಗ ಕಾಂತೇಶ್, ಸೊಸೆ ಶಾಲಿನಿ ವಿರುದ್ಧ ದೂರು ಇದ್ದು ಮೂವರೂ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟಿಸ್ ನಲ್ಲಿ ತಿಳಿಸಲಾಗಿದೆ.
ಬಿಜೆಪಿ ಅಧಿಕಾರಾವಧಿಯಲ್ಲಿ ಈಶ್ವರಪ್ಪ ಅವರು ಮಂತ್ರಿಯಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ ಸಂಬಂಧ ಪ್ರಕರಣ ದಾಖಲಾಗಿತ್ತು. ಶಿವಮೊಗ್ಗ ಮೂಲದ ವಕೀಲ ವಿನೋದ್ ಎಂಬವರು 2012ರಲ್ಲಿ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ಹೈಕೋರ್ಟ್, 2021ರಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಿತ್ತು.
2025ರ ಏಪ್ರಿಲ್ 5 ರಂದು ಲೋಕಾಯುಕ್ತ ಪೊಲೀಸರಿಗೆ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಸೂಚಿಸಿತ್ತು. ಎಫ್ಐಆರ್ ದಾಖಲಿಸಿ 3 ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಿತ್ತು. ಆದರೆ, ಮೂರು ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಈಶ್ವರಪ್ಪ, ಅವರು ಪುತ್ರ ಮತ್ತು ಸೊಸೆಗೆ ನೋಟಿಸ್ ಜಾರಿ ಮಾಡಿದ್ದಾರೆ.