ಮಹಿಳೆಯರು, ಬಾಲಕಿಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳು ದೇಶಾದ್ಯಂತ ಆತಂಕಕ್ಕೆ ಕಾರಣವಾಗಿದ್ದು, ಅವುಗಳನ್ನು ನಿಯಂತ್ರಿಸಲು ಕಠಿಣ ಕಾನೂನುಗಳನ್ನು ಒತ್ತಾಯಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯೊಬ್ಬರ ಹತ್ಯೆ ಪ್ರಕರಣದ ಗದ್ದಲದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಗೆ ದೀದಿ ಬರೆದಿರುವ ಪತ್ರ ಮಹತ್ವ ಪಡೆದುಕೊಂಡಿದೆ.
ದೇಶಾದ್ಯಂತ ಪ್ರತಿದಿನ ಸುಮಾರು 90 ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ ಎಂದು ಮಮತಾ ಬ್ಯಾನರ್ಜಿ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಅವರ ಮುಖ್ಯ ಸಲಹೆಗಾರ ಅಲಪನ್ ಬಂಡೋಪಾಧ್ಯಾಯ ಗುರುವಾರ ತಿಳಿಸಿದ್ದಾರೆ. ದೇಶಾದ್ಯಂತ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅರಾಜಕತೆ ಸಮಾಜದ ನಂಬಿಕೆ ಮತ್ತು ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಮಹಿಳೆಯರು ಸುರಕ್ಷತೆ ಮತ್ತು ನಂಬಿಕೆಯಿಂದ ಬದುಕುವಂತಾಗಲು ಈ ಅರಾಜಕತೆಗಳಿಗೆ ಅಂತ್ಯ ಹಾಡುವುದು ನಮ್ಮ ಕರ್ತವ್ಯ ಎಂದು ದೀದಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇಂತಹ ಘೋರ ಅಪರಾಧ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಕಾನೂನನ್ನು ಪರಿಚಯಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಈ ಪ್ರಕರಣಗಳ ತ್ವರಿತ ವಿಚಾರಣೆಗೆ ತ್ವರಿತಗತಿಯ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಿ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದರು. ಇಂತಹ ಪ್ರಕರಣಗಳ ತನಿಖೆಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.