ಬೆಂಗಳೂರು: ‘ಮಾಂಡೌಸ್’ ಚಂಡಮಾರುತದ ಪರಿಣಾಮ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ.
ಬೆಂಗಳೂರಿನಲ್ಲಿ ಶನಿವಾರ ಬೆಳಿಗ್ಗೆ ಕನಿಷ್ಠ ತಾಪಮಾನವು 16.8 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದ್ದು, ನಗರದಲ್ಲಿ 4.3 ಮಿ.ಮೀ ಮಳೆಯಾಗಿದೆ ಎಂದು ವರದಿ ತಿಳಿಸಿದೆ.
ಚಂಡಮಾರುತದಿಂದಾಗಿ, ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 14 ರವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದ್ದು, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ವರದಿ ನೀಡಿದೆ..
ಶುಕ್ರವಾರ ಸಂಜೆ ಬೆಂಗಳೂರಿನ ಬಿಟಿಎಂ, ಕಸ್ತೂರಿ ನಗರ, ಆರ್ಆರ್ ನಗರ ಸೇರಿದಂತೆ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 16 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಅಕ್ಟೋಬರ್ನಿಂದ ನಗರದಲ್ಲಿ 384.3 ಮಿ.ಮೀ ಮಳೆಯಾಗಿದೆ ಎಂದು ವರದಿ ತಿಳಿಸಿದೆ.
ʼತಮಿಳುನಾಡಿನ ಉತ್ತರ ಕರಾವಳಿಯ ಮೇಲೆ ʼಮ್ಯಾನ್-ಡೌಸ್ʼ ಎಂದು ಕರೆಯಲ್ಪಡುವ ʼಮಾಂಡೌಸ್ʼ ಚಂಡಮಾರುತವು ಗಂಟೆಗೆ 15 ಕಿ.ಮೀ ವೇಗದಲ್ಲಿ ವಾಯುವ್ಯದ ಕಡೆಗೆ ಚಲಿಸುತ್ತಿದ್ದು, ಉತ್ತರ ತಮಿಳುನಾಡಿನಲ್ಲಿ ವಾಯುಭಾರ ಕುಸಿತ ದುರ್ಬಲಗೊಂಡಿರುವ ಕಾರಣ, ಇದು ಬಹುತೇಕ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದೆ ಹಾಗೂ ಡಿಸೆಂಬರ್ 10 ರ ಮಧ್ಯಾಹ್ನದ ವೇಳೆಗೆ ಕ್ರಮೇಣ ವಾಯುಭಾರ ಕುಸಿತವಾಗಿ ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.