ಇಂಫಾಲ್: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಪ್ರಕ್ರಿಯೆಯನ್ನು ಪೂರ್ಣಗೊಳಿಸದೆ ರಾಜ್ಯದಲ್ಲಿ ಜನಗಣತಿ ನಡೆಸಲು ಮುಂದಾಗಿದ್ದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಣಿಪುರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಜನಗಣತಿ ಪ್ರಕ್ರಿಯೆಯನ್ನು ಮುಂದೂಡಿದೆ.
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಮಣಿಪುರದ ಪ್ರಸ್ತುತ ಪರಿಸ್ಥಿತಿಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು. ಈ ಸಭೆಯಲ್ಲಿ ಮಣಿಪುರ ರಾಜ್ಯಪಾಲರು, ಮುಖ್ಯಮಂತ್ರಿ ಯುಮ್ನಮ್ ಖೇಮ್ಚಂದ್ ಸಿಂಗ್, ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಎನ್ಆರ್ಸಿ ಜಾರಿಗೂ ಮುನ್ನ ಜನಗಣತಿಯನ್ನು ಕೈಬಿಡಬೇಕೆಂಬ ಮಣಿಪುರದ ವಿವಿಧ ಸಮುದಾಯಗಳ ಬೇಡಿಕೆ ಮತ್ತು ಜನರ ಭಾವನೆಗಳನ್ನು ಪರಿಗಣಿಸಿ, ಪ್ರಸ್ತುತಕ್ಕೆ ಜನಗಣತಿಯನ್ನು ಮುಂದೂಡಲು ಈ ಸಭೆಯಲ್ಲಿ ನಿರ್ಧರಿಸಲಾಯಿತು.
2023ರಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, 50,000ಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಅನೇಕರು ತಮ್ಮ ಮನೆಗಳನ್ನು ತೊರೆದು ಬೇರೆಡೆ ವಲಸೆ ಹೋಗಿದ್ದಾರೆ. ಈ ಅಸ್ಥಿರ ಪರಿಸ್ಥಿತಿಯಲ್ಲಿ ಎನ್ಆರ್ಸಿ ಅಂತಿಮಗೊಳಿಸದೆ ಜನಗಣತಿ ಕೈಗೆತ್ತಿಕೊಳ್ಳುವುದನ್ನು ಮೈತೈ ಮತ್ತು ನಾಗಾ ಸಮುದಾಯಗಳು ಬಲವಾಗಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
