ತಡರಾತ್ರಿ ಬೆಂಗಳೂರಿನ ಅಶೋಕನಗರ ಪೊಲೀಸ್ ಸ್ಟೇಶನ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆಯಾಗಿದೆ. ಮೃತ ವ್ಯಕ್ತಿ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಆಪ್ತ ಹೈದರ್ ಅಲಿ ಎಂದು ತಿಳಿದು ಬಂದಿದೆ.
ಅಶೋಕನಗರದ ಗರುಡ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದ್ದು ಈ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಲೈವ್ ಬ್ಯಾಂಡ್ ಕಾರ್ಯಕ್ರಮವೊಂದರಿಂದ ಸ್ನೇಹಿತನ ಜೊತೆ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಹೈದರ್ ಅಲಿ ಎಂಬ ಕಾಂಗ್ರೆಸ್ ಮುಖಂಡನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಹೈದರ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ಸ್ಥಳಾಂತರಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಹೈದರ್ ಅಲಿ ಜೊತೆಗೆ ಬೈಕ್ ನಲ್ಲಿ ಇದ್ದ ಅವರ ಸ್ನೇಹಿತನಿಗೂ ಗಂಭೀರ ಗಾಯಗಳಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಸಕ ಎನ್.ಎ.ಹ್ಯಾರಿಸ್ ಅವರ ನಿಕಟವರ್ತಿಯಾಗಿದ್ದ ಹೈದರ್ ಅಲಿ, ಅವರ ಪರ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದರು. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.