ಬೆಂಗಳೂರು: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಅವರು ಶನಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರದಿಂದ ಬರ ಪರಿಹಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿನ ಬರ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದೆ.
ರಾಜ್ಯವೂ ಎರಡು ಮನವಿಗಳನ್ನು ಸಲ್ಲಿಸಿದೆ.
236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.
”ರಾಜ್ಯದಲ್ಲಿ ಸುಮಾರು 30 ಸಾವಿರ ರೂಪಾಯಿ ಬೆಳೆ ಹಾನಿಯಾಗಿದೆ. ಕೇಂದ್ರದಿಂದ ಸುಮಾರು 17,900 ಕೋಟಿ ರೂಪಾಯಿ ಪರಿಹಾರ ಕೇಳಲಾಗಿದೆ. ಆದರೆ ಇದುವರೆಗೂ ಕೇಂದ್ರದಿಂದ ಒಂದು ರೂಪಾಯಿಯೂ ಬಿಡುಗಡೆಯಾಗಿಲ್ಲ” ಎಂದು ಸಿಎಂ ಹೇಳಿದರು.
ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಹಣದ ಆಮಿಷ ಒಡ್ಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಮಾಹಿತಿ ಇದೆ ಎಂದು ಹೇಳಿದರು.
ಬಿಜೆಪಿ 50 ಕೋಟಿ ಅಥವಾ ಸಚಿವ ಸ್ಥಾನ ಆಮಿಷ ಒಡ್ಡುತ್ತಿರುವ ಬಗ್ಗೆ ಮಾಹಿತಿ ಇದೆ ಎಂದರು. ಗೃಹ ಸಚಿವ ಪರಮೇಶ್ವರ್ ಅವರೊಂದಿಗಿನ ರಹಸ್ಯ ಸಭೆಯ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಗೃಹ ಸಚಿವರ ಆಹ್ವಾನದ ಮೇರೆಗೆ ಅವರ ಮನೆಗೆ ಊಟಕ್ಕೆ ಹೋಗಿದ್ದೆ ಹೊರತು ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಹೇಳಿದರು.