‌ಮಾನನಷ್ಟ ಮೊಕದ್ದಮೆ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮೇಲಿದ್ದ ಆರೆಸ್ಟ್ ವಾರಂಟ್‌ ತಡೆಯಾಜ್ಞೆ ತೆರವುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

ಜಬಲ್ಪುರ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಸಳಿಯ ಹಾಗೂ ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಮಧ್ಯಪ್ರದೇಶ ಹೈಕೋರ್ಟ್ ಭಾರಿ ಕಾನೂನು ಆಘಾತ ನೀಡಿದೆ. ಅವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯ ಹೊರಡಿಸಿದ್ದ ಆರೆಸ್ಟ್ ವಾರಂಟ್‌ಗೆ (Arrest Warrant) ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.

ಪಶ್ಚಿಮ ಬಂಗಾಳದ ಆಂತರಿಕ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಭ್ರಷ್ಟಾಚಾರದ ಆರೋಪದ ಮೇಲೆ ಈಗಾಗಲೇ ಜಾರಿ ನಿರ್ದೇಶನಾಲಯದ (ED) ತನಿಖೆಯನ್ನು ಎದುರಿಸುತ್ತಿರುವ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಈ ಹೊಸ ಬೆಳವಣಿಗೆಯು ಕಾನೂನು ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಲಿದೆ.

ಮಧ್ಯಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಬುಧವಾರದಂದು ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಭೋಪಾಲ್‌ನ ವಿಶೇಷ ನ್ಯಾಯಾಲಯವು ಹೊರಡಿಸಿದ್ದ ಬಂಧನ ವಾರಂಟ್ ಜಾರಿಗೆ ಕಳೆದ 2025 ರ ನವೆಂಬರ್‌ನಲ್ಲಿ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಈಗ ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಏನಿದು ಪ್ರಕರಣ? ಹಿರಿಯ ಬಿಜೆಪಿ ನಾಯಕ ಹಾಗೂ ಸಚಿವ ಕೈಲಾಶ್ ವಿಜಯವರ್ಗೀಯ ಅವರ ಪುತ್ರ, ಇಂದೋರ್‌ನ ಮಾಜಿ ಶಾಸಕ ಆಕಾಶ್ ವಿಜಯವರ್ಗೀಯ ಅವರು ಕಳೆದ 2021 ರಲ್ಲಿ ಭೋಪಾಲ್‌ನ ಎಂಪಿ/ಎಮ್‌ಎಲ್‌ಎ (MP-MLA) ವಿಶೇಷ ನ್ಯಾಯಾಲಯದಲ್ಲಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಈ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಳೆದ 2020 ರ ನವೆಂಬರ್‌ನಲ್ಲಿ ಕೋಲ್ಕತ್ತಾದಲ್ಲಿ ನಡೆದ ಬೃಹತ್ ರಾಜಕೀಯ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಅಭಿಷೇಕ್ ಬ್ಯಾನರ್ಜಿ, ಆಕಾಶ್ ವಿಜಯವರ್ಗೀಯ ಅವರನ್ನು ಬಹಿರಂಗವಾಗಿ “ಗೂಂಡಾ” ಎಂದು ಕರೆದಿದ್ದರು. ಇದು ತಮ್ಮ ವರ್ಚಸ್ಸಿಗೆ ಭಾರಿ ಧಕ್ಕೆ ತಂದಿದೆ ಎಂದು ಆಕಾಶ್ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ಮೊಕದ್ದಮೆಯ ಸುದೀರ್ಘ ವಿಚಾರಣೆ ನಡೆಸಿದ್ದ ಭೋಪಾಲ್ ನ್ಯಾಯಾಲಯವು ಅಭಿಷೇಕ್ ಬ್ಯಾನರ್ಜಿ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ತಾವು ಒಬ್ಬ ಜವಾಬ್ದಾರಿಯುತ ಸಂಸದರಾಗಿದ್ದು, ಕಾನೂನಿನಿಂದ ತಲೆಮರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಾದಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಅಂದಿನ ಪೀಠವು ಕಳೆದ ವರ್ಷ ನವೆಂಬರ್ 12 ರಂದು ವಾರಂಟ್ ಜಾರಿಗೆ ಮಧ್ಯಂತರ ತಡೆ ನೀಡಿತ್ತು.

ಆದರೆ, ಬುಧವಾರ ನಡೆದ ಅಂತಿಮ ಹಂತದ ಪ್ರಮುಖ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರರಾದ ಅಭಿಷೇಕ್ ಬ್ಯಾನರ್ಜಿ ಅವರ ಪರವಾಗಿ ಯಾವುದೇ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ವಕೀಲರ ಈ ಗೈರುಹಾಜರಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿ ಅಗರ್ವಾಲ್ ಅವರ ಪೀಠವು, ಅರ್ಜಿದಾರರಿಗೆ ಈ ಪ್ರಕರಣವನ್ನು ಮುಂದುವರಿಸಲು ಆಸಕ್ತಿ ಇಲ್ಲದಂತೆ ಕಾಣುತ್ತಿದೆ ಎಂದು ತಮ್ಮ ಆದೇಶದಲ್ಲಿ ಬೇಸರ ವ್ಯಕ್ತಪಡಿಸಿದರು. ತಕ್ಷಣವೇ ಜಾರಿಗೆ ಬರುವಂತೆ ಬಂಧನ ವಾರಂಟ್‌ ಮೇಲಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದ ನ್ಯಾಯಾಧೀಶರು, ಅರ್ಜಿಯನ್ನು ವಜಾಗೊಳಿಸಿ ಆದೇಶದ ಅಧಿಕೃತ ಪ್ರತಿಯನ್ನು ಭೋಪಾಲ್ ನ್ಯಾಯಾಲಯಕ್ಕೆ ರವಾನಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು