ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಲೋಕೋ ಹುದ್ದೆಗಳಿಗೆ ನಾಳೆ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಯಲ್ಲಿ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರವೇ ಬರೆಯಲು ಅವಕಾಶ ನೀಡಲಾಗಿದೆ. ಕನ್ನಡ ಭಾಷೆಯನ್ನು ನಿರ್ಲಕ್ಷಿಸುವ ಮೂಲಕ ಕೇಂದ್ರವು ಆರೂವರೆ ಕೋಟಿ ಕನ್ನಡಿಗರನ್ನು ವಮಾನಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ.
ತಕ್ಷಣವೇ ಕನ್ನಡ ಭಾಷೆಯಲ್ಲೂ ಪರೀಕ್ಷೆಗೆ ಕೂರಲು ಅವಕಾಶ ಮಾಡಿಕೊಡಬೇಕೆಂದು ಅವರು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣರವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಇದೇ ಹುದ್ದೆಗಳಿ ಮೇ ತಿಂಗಳಿನಲ್ಲಿ ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಕನ್ನಡ ಭಾಷೆಗೂ ಪ್ರಾಶಸ್ತ್ಯ ನೀಡಲಾಗಿತ್ತು. ಆದರೆ ಈಗ ಹಿಂದಿ, ಇಂಗ್ಲಿಷ್ ಮತ್ತು ತಮಿಳು ಭಾಷೆಗೆ ಮಾತ್ರವೇ ಅವಕಾಶ ನೀಡುವ ಮೂಲಕ ಕನ್ನಡದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಲಾಗಿದೆ. ಇದೊಂದು ಅತ್ಯಂತ ದುರಂತದ ನಡೆಯಾಗಿದ್ದು, ಕಳೆದ ಎರಡು ತಿಂಗಳುಗಳಿಂದ ಕನ್ನಡ ಭಾಷೆಯಲ್ಲಿ ಅಭ್ಯಾಸ ನಡೆಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ರೈಲ್ವೆ ಸಚಿವರು ಕೂಡಲೇ ಮಧ್ಯಪ್ರವೇಶ ಮಾಡಿ ಅನ್ಯಾಯವನ್ನು ಸರಿಪಡಿಸಬೇಕು ಎಂದು ಚಂದ್ರು ಒತ್ತಾಯಿಸಿದ್ದಾರೆ.
ಕೆಎಎಸ್ ಪರೀಕ್ಷೆ ಸಮಯ ಬದಲಾಯಿಸಿ
ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಇದೇ ತಿಂಗಳ ಆಗಸ್ಟ್ 25ರಂದು ದಿನಾಂಕವನ್ನು ನಿಗದಿಪಡಿಸಲಾಗಿದೆ. ಆದರೆ ಆದರೆ ಕೇಂದ್ರ ಸರ್ಕಾರದ ಐಬಿಪಿಎಸ್ ಬ್ಯಾಂಕ್ ಕ್ಲರ್ಕ್ ಗಳ ಹುದ್ದೆಗಳಿಗಾಗಿ ನಿಗದಿಪಡಿಸಿದ್ದಾರೆ ಇದೆ ಆಗಸ್ಟ್ ತಿಂಗಳ 24ರಂದು ನಿಗದಿಪಡಿಸಿದ್ದಾರೆ. ಹೀಗಿರುವಾಗ ಎರಡೂ ಹುದ್ದೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಅಭ್ಯಾಸ ಮಾಡಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗುವ ಕಾರಣ ಕರ್ನಾಟಕದ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಮುಖ್ಯಮಂತ್ರಿ ಚಂದು ಕಾಗದ ಬರೆದಿದ್ದಾರೆ. ಮುಖ್ಯಮಂತ್ರಿಯವರು ಈ ಕೂಡಲೇ ಮಧ್ಯಪ್ರವೇಶಿಸಿ ಕೆಎಎಸ್ ಪರೀಕ್ಷಾ ದಿನಾಂಕವನ್ನು ಮುಂದೂಡಬೇಕೆಂದು ಪತ್ರದಲ್ಲಿ ಕೋರಿದ್ದಾರೆ.
ಇದಲ್ಲದೆ ಪರೀಕ್ಷಾ ದಿನಾಂಕದಂದು ರಾಜ್ಯದ ಅನೇಕ ಜಿಲ್ಲೆಗಳಿಂದ ಆಗಮಿಸುವ ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಹಾಗೂ ರೈಲ್ವೆ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಸಹ ಅವರು ಆಗ್ರಹಿಸಿದ್ದಾರೆ.