ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಕ್ರಿಮಿನಲ್ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮರುಘಾ ಶರಣ ಹಾಗೂ ಇತರ ಇಬ್ಬರನ್ನು ಖುಲಾಸೆಗೊಳಿಸಿರುವ ಚಿತ್ರದುರ್ಗ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಬೇಕು ಮತ್ತು ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಮಾನಿಸಿ ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೋರಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್ಗೆ ಪ್ರತ್ಯೇಕವಾಗಿ ಎರಡು ಕ್ರಿಮಿನಲ್ ಮೇಲ್ಮನವಿಗಳನ್ನು ಸಲ್ಲಿಸಿದ್ದಾರೆ.
ಬುಧವಾರ ಸಲ್ಲಿಕೆಯಾಗಿರುವ ಈ ಮೇಲ್ಮನವಿಗಳಲ್ಲಿ ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆ, ಖುಲಾಸೆಗೊಂಡಿರುವ ಆರೋಪಿಗಳಾದ ಶಿವಮೂರ್ತಿ ಮುರುಘಾ ಶರಣರು, ಎಸ್. ರಶ್ಮಿ ಮತ್ತು ಎ.ಜೆ. ಪರಮಶಿವಯ್ಯ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಈ ಅರ್ಜಿಗಳು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಕಳೆದ ನವೆಂಬರ್ 26 ರಂದು ಐಪಿಸಿ ಸೆಕ್ಷನ್ಗಳಾದ 376(2)(ಎನ್), 376(3), 323, 504, 506, ಹಾಗೂ ಪೋಕ್ಸೊ (POCSO) ಕಾಯಿದೆಯ ಸೆಕ್ಷನ್ಗಳಾದ 5(I), 6 ಮತ್ತು 17ರ ಆರೋಪಗಳಿಂದ ಸ್ವಾಮೀಜಿ ಸೇರಿದಂತೆ ಮೂವರನ್ನು ವಿಚಾರಣಾಧೀನ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
