Saturday, June 15, 2024

ಸತ್ಯ | ನ್ಯಾಯ |ಧರ್ಮ

ಮುರುಘಾ ಶರಣರ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲು

ಮೈಸೂರು: ʼಹಣ್ಣು ಸಿಹಿಯಲ್ಲಿ ಮತ್ತು ಬರುವ ಔಷಧಿ ಕೊಟ್ಟು ಮಠದ ಉಚಿತ ಹಾಸ್ಟೆಲ್‌ನಲ್ಲಿರುವ ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದಾರೆʼ ಎಂದು ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಫೊಕ್ಸೊ ಕಾಯ್ದೆಯಡಿ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದಲ್ಲಿನ ಹಲವು ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಹಲವು ದಿನಗಳಿಂದಲೂ ಲೈಂಗಿಕ ದೌರ್ಜನ್ಯ ಕೊಡುತ್ತಿದ್ದರು ಎಂದು ಇಬ್ಬರು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದರು. ಈ ಸಂಬಂಧ ಒಡನಾಡಿ ಸಂಸ್ಥೆಯವರು ವಿದ್ಯಾರ್ಥಿನಿಯರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ವಿಚಾರಣೆ ನಡೆಸಲು ಮನವಿ ಮಾಡಿದ್ದರು.

ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ ಮಕ್ಕಳ ಕಲ್ಯಾಣ ಸಮಿತಿ, ಸ್ವಾಮೀಜಿ ವಿರುದ್ಧ ಎಫ್‌ ಐ ಆರ್‌ ದಾಖಲಿಸಲು ಆದೇಶ ನೀಡಿತು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ನಜರಾಬಾದ್‌ ಠಾಣೆಯಲ್ಲಿ ದೂರು ದಾಖಲಿಸಿದರು. ದೂರು ದಾಖಲಿಸಿಕೊಂಡ ಪೊಲೀಸರು Protection of children from sexual affences Act (U/s- 17,5 (L),6); IPC 1860 U/s 376 (2)(n), 376(3), 149 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ನಡೆದಿರುವುದು ಚಿತ್ರದುರ್ಗದಲ್ಲಿ ಆದ್ದರಿಂದ ಈ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ ಆಗುವ ಸಾಧ್ಯತೆ ಇದೆ.

ದೂರಿನ ಪ್ರಕಾರ ಮುರುಘಾ ಶರಣರು ಒಬ್ಬ ಬಾಲಕಿಯನ್ನು ಮೂರು ವರ್ಷಗಳಿಂದ ಅತ್ಯಾಚಾರ ನಡೆಸುತ್ತ ಬಂದಿದ್ದಾರೆ. ಇನ್ನೊಬ್ಬ ಬಾಲಕಿಯನ್ನು ಒಂದೂವರೆ ವರ್ಷಗಳಿಂದ ಅತ್ಯಾಚಾರ ನಡೆಸುತ್ತ ಬಂದಿದ್ದಾರೆ.

ಈ ಸತತ ಲೈಂಗಿಕ ದೌರ್ಜನ್ಯಕ್ಕೆ ವಸತಿ ನಿಲಯದ ವಾರ್ಡನ್ ರಶ್ಮಿ, ಮರಿಸ್ವಾಮಿಯಾದ ಬಸವಾದಿತ್ಯ, ಲಾಯರ್ ಗಂಗಾಧರಯ್ಯ,ಲೀಡರ್ ಪರಮಶಿವಯ್ಯ ಸಹಾಯ ಮಾಡಿದ್ದಾರೆ. ಸ್ವಾಮೀಜಿ ಜೊತೆಯಲ್ಲಿ ಈ ನಾಲ್ಕು ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಸಂತ್ರಸ್ಥ ಬಾಲಕಿಯರನ್ನು ಒಡನಾಡಿ ಸಂಸ್ಥೆಯಲ್ಲಿ ತಾತ್ಕಾಲಿಕ ವಸತಿ ಕಲ್ಪಿಸಲಾಗಿದೆ.

ವಿದ್ಯಾರ್ಥಿನಿಯರು ಹೇಳಿದ್ದೇನು?

ʻʻಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್‌ (ರಶ್ಮಿ) ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅವರು ನಮಗೆ ಮತ್ತು ಬರುವಂತೆ ಮಾಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಇದೇ ಅನುಭವ ಹಲವಾರು ವಿದ್ಯಾರ್ಥಿನಿಯರಿಗೆ ಆಗಿದೆ. ದೂರು ನೀಡಲು ಯಾರಿಗೂ ಧೈರ್ಯವಿರಲಿಲ್ಲ. ಚಿತ್ರದುರ್ಗದಲ್ಲಿ ನಮಗೆ ನ್ಯಾಯ ಸಿಗಲಿಲ್ಲವೆಂಬ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯ ಸಹಾಯ ಪಡೆದಿದ್ದೇವೆ.ʼʼ

Related Articles

ಇತ್ತೀಚಿನ ಸುದ್ದಿಗಳು