Friday, June 14, 2024

ಸತ್ಯ | ನ್ಯಾಯ |ಧರ್ಮ

ಎ.1ರಿಂದ ಹೊಸಬರು ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು, 2.95 ಲಕ್ಷ ಎಪಿಎಲ್ ಕಾರ್ಡ್ ವಿಲೇವಾರಿಗೆ ಕ್ರಮ: ಕೆ.ಎಚ್.ಮುನಿಯಪ್ಪ


ಬೆಂಗಳೂರು: ಇದುವರೆಗೂ ಯಾರಿಗೆ ರೇಷನ್‌ ಕಾರ್ಡ್ ಸಿಕ್ಕಿಲ್ಲವೋ ಅಂಥವರು ಎಪ್ರಿಲ್‌ 1 ರಿಂದ ಅರ್ಜಿ ಸಲ್ಲಿಸಬಹದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.


ಅಧಿವೇಶನದಲ್ಲಿಂದು ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿ(ಎಪಿಎಲ್ ಕಾರ್ಡ್)ಗಳನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈವರೆಗೆ 57,651 ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್ಗಳನ್ನು ವಿತರಿಸಲಾಗಿದೆ. ಬಾಕಿ ಇರುವ ಉಳಿದ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ಜಂಟಿ/ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.


ಈ ಹಿಂದಿನ ಸರಕಾರದ ಅವಧಿಯಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಚುನಾವಣೆ ಹಾಗೂ ಇನ್ನೀತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತ ಬಂದಿದ್ದು, ಈಗ ಅವುಗಳನ್ನು ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಅವುಗಳನ್ನು ಮಾ.31ರೊಳಗೆ ವಿಲೇವಾರಿ ಮಾಡಿ ಎಪ್ರಿಲ್ 1ರಿಂದ ಹೊಸ ಅರ್ಜಿಗಳ ಆಹ್ವಾನಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.


ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ತಹಶೀಲ್ದಾರ್ ಶಿಫಾರಸು ವರದಿ ಆಧರಿಸಿ ಬರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಕಾರ್ಡ್ ಒದಗಿಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ 2021 ಜನವರಿಯಿಂದ 2023ರ ಮಾರ್ಚ್ ವರೆಗೆ 13,104 ಆದ್ಯತಾ ಪಡಿತರ ಚೀಟಿ ಕೋರಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 10,738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದವುಗಳನ್ನು ಪರಿಶೀಲಿಸಿ ಅರ್ಹ ಅರ್ಜಿಗಳಿಗೆ ಕಾರ್ಡ್ ಒದಗಿಸುವುದಕ್ಕೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದ ಸಚಿವ ಮುನಿಯಪ್ಪ, ಉಡುಪಿ ಜಿಲ್ಲೆಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 134 ಅರ್ಹ ಫಲಾನುಭವಿಗಳಿಗೆ ಆದ್ಯತಾ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ ಎಂದು ವಿವರಣೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು