ಬೆಂಗಳೂರು: ಕೇರಳದಲ್ಲಿ ಮಾರಣಾಂತಿಕ ನಿಫಾ ವೈರಸ್ ಉಲ್ಬಣಗೊಳ್ಳುತ್ತಿದೆ. ಈಗಾಗಲೇ ಎರಡು ಸಾವುಗಳು ವರದಿಯಾಗಿವೆ. ಕಳೆದ ತಿಂಗಳು 30ರಂದು ಹಾಗೂ ಈ ತಿಂಗಳ 11ರಂದು ಕೋಳಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದರು.
ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಈ ವೈರಸ್ ಮತ್ತಷ್ಟು ಹರಡುವುದನ್ನು ತಡೆಯಲು ಕೇರಳ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಮೃತರು ವಾಸಿಸುವ ಸ್ಥಳಗಳಿಂದ ಐದು ಚದರ ಕಿಲೋಮೀಟರ್ವರೆಗಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಕೋಳಿಕ್ಕೋಡ್ (Kozhikode) ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.
ಈಗಾಗಲೇ ಕೇರಳ ತಲುಪಿರುವ ಕೇಂದ್ರ ವೈದ್ಯಕೀಯ ಮತ್ತು ಆರೋಗ್ಯ ಸಚಿವಾಲಯ ವಿಶೇಷವಾಗಿ ರಚಿಸಿರುವ ಕೇಂದ್ರ ತಂಡ ಕೋಳಿಕ್ಕೋಡ್ ಜಿಲ್ಲೆಗೆ ಭೇಟಿ ನೀಡಲಿದೆ. ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್, ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಮತ್ತು ನಿಮ್ಹಾನ್ಸ್ನ ತಜ್ಞರನ್ನು ಒಳಗೊಂಡ ಐದು ಸದಸ್ಯರ ತಂಡವು ಪರಿಸ್ಥಿತಿಯನ್ನು ನಿರ್ಣಯಿಸಲಿದೆ.
ನಿಫಾ ವೈರಸ್ ಪ್ರಕರಣಗಳ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು, ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಕರ್ನಾಟಕ ಸರ್ಕಾರವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕೇರಳ-ಕರ್ನಾಟಕ ಗಡಿಯಲ್ಲಿ ಪ್ರತ್ಯೇಕ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಸಲಹೆಯನ್ನೂ ನೀಡಲಾಗಿದೆ. ಕೇರಳದಲ್ಲಿ ನಿಫಾ ವೈರಸ್ ಹರಡಿರುವ ಸ್ಥಳಗಳಿಗೆ ಜನರು ಹೋಗದಂತೆ ಮನವಿ ಮಾಡಿದೆ.
ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಯಾ ಜಿಲ್ಲೆಗಳ ಚೆಕ್ ಪೋಸ್ಟ್ ಮೂಲಕ ಸಂಚರಿಸುವವರಿಗೆ ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ನಿಫಾ ವೈರಸ್ ಚಿಕಿತ್ಸೆ ಕುರಿತು ಈ ನಾಲ್ಕು ಜಿಲ್ಲೆಗಳ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ.
ನಿಫಾ ವೈರಸ್ ಪೀಡಿತರಿಗಾಗಿ ಜಿಲ್ಲಾ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್ಗಳನ್ನು ಸ್ಥಾಪಿಸಲಾಗಿದೆ ಎಂದು ಕರ್ನಾಟಕ ಸರ್ಕಾರವೂ ಘೋಷಿಸಿದೆ. ಈ ಉದ್ದೇಶಕ್ಕಾಗಿ ಕನಿಷ್ಠ ಎರಡರಿಂದ ನಾಲ್ಕು ಹಾಸಿಗೆಗಳನ್ನು ನಿಗದಿಪಡಿಸಬೇಕು ಎಂದು ಆರೋಗ್ಯ ಸಚಿವಾಲಯ ಆದೇಶಿಸಿದೆ. ಕರ್ನಾಟಕದಲ್ಲಿ ನಿಫಾ ವೈರಸ್ ಹರಡದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದೆ.