ಚೆನ್ನೈ: ಮುಂದಿನ 25 ವರ್ಷಗಳ ಕಾಲ ಕ್ಷೇತ್ರ ಪುನರ್ವಿಂಗಡಣೆಯನ್ನು ಸ್ಥಗಿತಗೊಳಿಸುವಂತೆ ಕೋರುವ ನಿರ್ಣಯವನ್ನು ಜಂಟಿ ಕ್ರಿಯಾ ಸಮಿತಿಯ ಸಭೆಯು ಅಂಗೀಕರಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ಶನಿವಾರ ಚೆನ್ನೈನಲ್ಲಿ ಆಯೋಜಿಸಿದ್ದ ಜಂಟಿ ಕ್ರಿಯಾ ಸಮಿತಿಯ ಸಭೆಯಲ್ಲಿ ಕೇರಳ, ತೆಲಂಗಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್, ರೇವಂತ್ ರೆಡ್ಡಿ, ಭಗವಂತ್ ಸಿಂಗ್ ಮಾನ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಬಿಜೆಡಿ, ಬಿಆರ್ಎಸ್ ಮತ್ತು ಎಸ್ಎಡಿ ಪ್ರತಿನಿಧಿಗಳು ಭಾಗವಹಿಸಿದ್ದರು.
ಡಿಎಂಕೆ ಸಂಸದೆ ಕನಿಮೋಳಿ ಅವರು ಮುಂದಿನ 25 ವರ್ಷಗಳ ಕಾಲ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೋರುವ ಜಂಟಿ ಪ್ರಸ್ತಾವನೆಯನ್ನು ಓದಿದರು. ಬಹು ಪಕ್ಷಗಳ ಬೆಂಬಲದೊಂದಿಗೆ ನಡೆದ ಸಭೆಯಲ್ಲಿ ರಾಜಕೀಯ ಪ್ರಾತಿನಿಧ್ಯ ಮತ್ತು ಪ್ರಾದೇಶಿಕ ಸಮತೋಲನದ ಬಗ್ಗೆ ಸಭೆಯಲ್ಲಿದ್ದ ಎಲ್ಲ ಪಕ್ಷಗಳ ಮುಖಂಡರು ಕಳವಳ ವ್ಯಕ್ತಪಡಿಸಿದರು.
ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಬಗ್ಗೆ ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕೆಂದು ಜಂಟಿ ಕ್ರಿಯಾ ಸಮಿತಿ ಸರ್ವಾನುಮತದಿಂದ ಒತ್ತಾಯಿಸಿತು. 1971 ರ ಜನಗಣತಿಯ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಸಂಸದೀಯ ಕ್ಷೇತ್ರಗಳ ಮೇಲಿನ ಪುನರ್ವಿಂಗಡನೆಯನ್ನು ಮುಂದಿನ 25 ವರ್ಷಗಳವರೆಗೆ ಯಥಾಸ್ಥಿತಿ ಕಾಪಾಡಬೇಕು ಎಂದು ಒತ್ತಾಯಿಸಿದೆ.