ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವ ವರೆಗೂ ಸರ್ಕಾರದ ಅಧೀನದಲ್ಲಿ ಬರುವ ವಿದ್ಯುತ್ ಪ್ರಸರಣ ನಿಗಮಗಳನ್ನು ಖಾಸಗೀಕರಣ ಮಾಡುವುದಿಲ್ಲ. ಈಗಾಗಲೇ ಕೇಂದ್ರ ಸರ್ಕಾರದಿಂದ ಈ ಬಗ್ಗೆ ಒತ್ತಡ ಇದ್ದರೂ ನಾವು ಅದನ್ನು ಪರಿಗಣಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಹಿಂದೆ ನಾನು ಇಂಧನ ಸಚಿವನಾದ ದಿನದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಮುಂಬೈ, ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಎಸ್ಕಾಂಗಳನ್ನು ಖಾಸಗಿಯವರಿಗೆ ನೀಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲೂ ಖಾಸಗಿಯವರಿಗೆ ನೀಡಬೇಕು ಎಂದು ಕೇಂದ್ರ ಸರ್ಕಾರ ನನ್ನ ಮೇಲೆ ಒತ್ತಡ ಹೇರಿತ್ತು ಎಂದು ಡಿಕೆ ಶಿವಕುಮಾರ್ ಹೇಳಿದರು.
ಕರ್ನಾಟಕ ಪ್ರಸರಣ ನಿಗಮ ನೌಕರರ ಸಂಘದ ವಜ್ರ ಮಹೋತ್ಸವ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಮಾತನಾಡಿದರು.
ನಾನು ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ, ಶೇ. 19-20ರಷ್ಟು ಟ್ರಾನ್ಸ್ಮಿಷನ್ ನಷ್ಟ ಆಗುತ್ತಿತ್ತು. ನಾವು ಅದನ್ನು ಶೇ. 10ಕ್ಕೆ ಇಳಿಸಿದ್ದೇವೆ. ಇದು ದೇಶಕ್ಕೆ ಮಾದರಿ. ಸಚಿವ ಕೆ.ಜೆ. ಜಾರ್ಜ್ ಅವರೂ ಸಹ ಈ ಇಲಾಖೆಯ ಜವಾಬ್ದಾರಿ ತೆಗೆದುಕೊಂಡು ಪಾರದರ್ಶಕವಾಗಿ ಬಹಳ ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ ಎಂದರು.
ಇಲಾಖೆಯಲ್ಲಿ ಈ ಹಿಂದೆ ಒಂದು ರೂಪಾಯಿ ಲಂಚ ಪಡೆಯದೇ, ಪಾರದರ್ಶಕವಾಗಿ 24 ಸಾವಿರ ನೌಕರರನ್ನು ನೇಮಕಾತಿ ಮಾಡಿದೆ. ನಿಮ್ಮ ಮನೆ ಬಾಗಿಲಿಗೆ ನೌಕರಿಯನ್ನು ಕೊಟ್ಟ ತೃಪ್ತಿ ನನಗಿದೆ ಎಂದರು. ನಾನು ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ ರಾಜ್ಯದಲ್ಲಿ 11 ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿತ್ತು. ಆದರೆ ಇಲಾಖೆ ಜವಾಬ್ದಾರಿ ಬಿಡುವಾಗ ರಾಜ್ಯದಲ್ಲಿ 23 ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿತ್ತು ಎಂದು ಅವರು ವಿವರಿಸಿದರು.