Home ರಾಜಕೀಯ ಸಂಪುಟ ಪುನಾರಚನೆ ಮಾಹಿತಿ ಇಲ್ಲ, ಅದು ಸಿಎಂ ವಿವೇಚನೆಗೆ ಬಿಟ್ಟದ್ದು: ಡಿಕೆಶಿ

ಸಂಪುಟ ಪುನಾರಚನೆ ಮಾಹಿತಿ ಇಲ್ಲ, ಅದು ಸಿಎಂ ವಿವೇಚನೆಗೆ ಬಿಟ್ಟದ್ದು: ಡಿಕೆಶಿ

0

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವು ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಷಯವಾಗಿದ್ದು, ಅವರೇ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ವಿಷಯದಲ್ಲಿ ತಾವು ಬಹಿರಂಗವಾಗಿ ಮಾತನಾಡುವುದಿಲ್ಲ ಎಂದು ಡಿಕೆಶಿ ಹೇಳಿದರು. ಒಂದು ವೇಳೆ ತಮ್ಮೊಂದಿಗೆ ಈ ಕುರಿತು ಚರ್ಚೆ ನಡೆಸಿದರೆ, ತಮ್ಮ ಸಲಹೆಗಳನ್ನು ನೀಡುವುದಾಗಿ ತಿಳಿಸಿದರು. ಮಾಧ್ಯಮದವರು ಈ ವಿಷಯದ ಬಗ್ಗೆ ಅನಗತ್ಯ ಚರ್ಚೆ ನಡೆಸಿ ಗೊಂದಲ ಸೃಷ್ಟಿಸಬೇಡಿ ಎಂದು ಅವರು ಮನವಿ ಮಾಡಿದರು.

ಇದೇ ವೇಳೆ, ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡುವುದು, ಸಾಕಷ್ಟು ವಿಷಯಗಳ ಬಗ್ಗೆ ಚರ್ಚೆ ನಡೆಸುವುದು ಸಹಜ” ಎಂದು ತಿಳಿಸಿದರು.

ಅಲ್ಲದೆ, ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಗ್ ಬಾಸ್ ವಿವಾದದ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಬುಧವಾರ ರಾತ್ರಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿರುವುದಾಗಿ ಹೇಳಿದರು. “ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ಇರುವ ದೊಡ್ಡ ಕಾರ್ಖಾನೆಯೇನಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

You cannot copy content of this page

Exit mobile version